ಚಿಕ್ಕಮಗಳೂರುಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದ ನವೀಕರಣಕ್ಕೆ ಹಣಕಾಸಿನ ವ್ಯವಸ್ಥೆ ಮಾಡಿ ಕಾಮಗಾರಿ ಆರಂಭಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆ ನೀಡಲಾಗುವುದು ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಚಾಲನೆ ।
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದ ನವೀಕರಣಕ್ಕೆ ಹಣಕಾಸಿನ ವ್ಯವಸ್ಥೆ ಮಾಡಿ ಕಾಮಗಾರಿ ಆರಂಭಿಸಲಾಗಿದೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆ ನೀಡಲಾಗುವುದು ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದ ಆವರಣದಲ್ಲಿ ನವೀಕೃತ ಕಾಮಗಾರಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಕೆಲವು ಕಾಮಗಾರಿ ಶಂಕುಸ್ಥಾಪನೆ ಮಾಡಿ, ಅನುದಾನದ ಕೊರತೆಯಿಂದ ಕಾಮಗಾರಿ ನಿಲ್ಲಿಸು ತ್ತಾರೆ. ಹೀಗಾಗಿ, ಕ್ರೀಡಾಂಗಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಕಾಮಗಾರಿ ಆರಂಭಿಸಲು ಶಾಸಕ ತಮ್ಮಯ್ಯ ಅವರಿಗೆ ಸೂಚನೆ ನೀಡಿದೆ. ಕ್ರೀಡಾಂಗಣದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವುದಾಗಿ ತಿಳಿಸಿದ್ದೆ ಆದರೆ ಒತ್ತಾಯ ಮಾಡಿ ಶಂಕುಸ್ಥಾಪನೆ ಕಾಮಗಾರಿಗೆ ಕರೆ ತಂದಿದ್ದಾರೆ ಎಂದರು.
ಕ್ರೀಡಾಂಗಣದ ನವೀಕರಣಕ್ಕೆ ಅನುದಾನದ ವ್ಯವಸ್ಥೆ ಮಾಡಿಕೊಂಡು ಕಾಮಗಾರಿ ಆರಂಭಿಸಲಾಗಿದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಹಿಂದಿನ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಸೇರಿದಂತೆ ಎಲ್ಲರೂ ಸಹಕಾರ ನೀಡಿದ್ದಾರೆ ಎಂದು ತಿಳಿಸಿದರು.ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಕಳೆದ ಸರ್ಕಾರದ ಅವಧಿಯಲ್ಲಿ ಖೇಲೋ ಇಂಡಿಯಾ ಯೋಜನೆ ಅಡಿ ಶತಮಾನೋತ್ಸವ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದೀಗ ಮತ್ತೆ ಆರಂಭಿಸಲಾಗಿದೆ ಎಂದರು.ಚೇಲೋ ಇಂಡಿಯಾ ಯೋಜನೆ ಅಡಿ ಇದ್ದ ಮೂರು ಕೋಟಿ ಅನುದಾನ, ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಅವರು ಸಿಎಸ್ಆರ್ ನಿಧಿ ಅಡಿ ನೀಡಿದ ₹2 ಕೋಟಿ, ಸರ್ಕಾರದಿಂದ ₹1.90 ಕೋಟಿ ಹಾಗೂ ಮುಖ್ಯಮಂತ್ರಿಗಳು ವಿಶೇಷ ಅನುದಾನ ದಲ್ಲಿ ₹1 ಕೋಟಿ ವಿಶೇಷ ಅನುದಾನ ಸೇರಿಸಿ ಒಟ್ಟು ₹7.90 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.
ಆದಷ್ಟು ಬೇಗನೆ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ ಪೂರ್ಣಗೊಳಿಸುತ್ತೇವೆ. ಇದಲ್ಲದೆ ಕ್ರೀಡಾಂಗಣದಲ್ಲಿ ಪೆವಿಲಿಯನ್ ಹಾಗೂ ಲೈಟಿಂಗ್ ವ್ಯವಸ್ಥೆ ಯೋಜನೆ ಇದೆ. ಈ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ತಿಳಿಸಿದರು.ಈ ವೇಳೆ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ ಮತ್ತಿತರರಿದ್ದರು.
-- ಬಾಕ್ಸ್--ವಿಶೇಷ ವರದಿ ಪ್ರಕಟಿಸಿದ ಎರಡು ದಿನಕ್ಕೆ ಶಂಕುಸ್ಥಾಪನೆ
ಶತಮಾನೋತ್ಸವ ಕ್ರೀಡಾಂಗಣದ ಕಾಮಗಾರಿ ನೆನೆಗುದಿಗೆ ಬಿದ್ದಿರುವ ಕುರಿತು ಕಳೆದ ಸೋಮವಾರ ಕನ್ನಡಪ್ರಭ ‘ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣಕ್ಕೆ ಮರುಜೀವ?’ ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾದ ಎರಡೇ ದಿನಕ್ಕೆ ಕ್ರೀಡಾಂಗಣದ ನವೀಕರಣಕ್ಕೆ ಬುಧವಾರ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದ್ದಾರೆ.