ಕನ್ನಡಪ್ರಭ ವಾರ್ತೆ ಮೈಸೂರುನಗರದ ಮಹಾರಾಜ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಂಸ್ಥಾಪಕ ಮಹಾರಾಜ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ಬುಧವಾರ ಆಯೋಜಿಸಲಾಗಿತ್ತು.ಶಾಲೆ ಆವರಣದ ಶ್ರೀಮನ್ ಮಹಾರಾಜ ಮುಮ್ಮಡಿ ಕೃಷ್ಣರಾಜ ಒಡೆಯರ್ ಪುತ್ಥಳಿಗೆ ಹಿರಿಯ ವಿದ್ಯಾರ್ಥಿಗಳೆಲ್ಲರೂ ಮಾಲಾರ್ಪಣೆ ಮಾಡಿದ ಬಳಿಕ, ಪುಷ್ಪಾರ್ಚನೆ ನೆರವೇರಿಸಿದರು.95 ವರ್ಷದ ಹಳೆಯ ವಿದ್ಯಾರ್ಥಿ ಹಾಗೂ ಹಿರಿಯ ನಾಗರಿಕ ಮಂಡಳಿ ಅಧ್ಯಕ್ಷ ಎಸ್.ವಿ. ಗೌರಪ್ಪ ಅವರಿಗೆ ಗೌರವ ಸಮರ್ಪಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಶ್ರೀಧರ್ ರಾಜೇ ಅರಸು ಅಧ್ಯಕ್ಷತೆ ವಹಿಸಿದ್ದರು. ಮತ್ತೊಬ್ಬ ಹಳೆಯ ವಿದ್ಯಾರ್ಥಿ ಹಾಗೂ ಆದಿತ್ಯ ಆಸ್ಪತ್ರೆ ಮುಖ್ಯಸ್ಥ ಡಾ.ಎನ್. ಚಂದ್ರಶೇಖರ್ ಮುಖ್ಯ ಅತಿಥಿಯಾಗಿದ್ದರು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಉದಯಶಂಕರ್‌, ರಂಗಸ್ವಾಮಿ ಇದ್ದರು. ಶಾಲೆಯ ಮುಖ್ಯಸ್ಥ ಡಾ. ಮಹೇಶ್ ಅವರು ಕಾರ್ಯಕ್ರಮದ ನೇತೃತ್ವವಹಿಸಿದ್ದರು. ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು. ಈ ವರ್ಷವೂ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ಉತ್ತಮ ದರ್ಜೆಯಲ್ಲಿ ತೇರ್ಗಡೆ ಆಗುವಂತೆ ಶ್ರಮ ವಹಿಸುವುದಾಗಿ ಅಧ್ಯಾಪಕರು ಪ್ರತಿಜ್ಞೆ ಮಾಡಿದರು.