ಕರ್ನಾಟಕದ ವಿವಿಧ ಭಾಗಗಳ ಕೈಮಗ್ಗ ಸಹಕಾರ ಸಂಘಗಳು ಮತ್ತು ನೇಕಾರರು ತಯಾರಿಸಿರುವ ರೇಷ್ಮೆ ಸೀರೆಗಳು, ಹತ್ತಿ ಸೀರೆಗಳು
ಕನ್ನಡಪ್ರಭ ವಾರ್ತೆ ಮೈಸೂರುಅಭಿವೃದ್ಧಿ ಆಯುಕ್ತರು (ಕೈಮಗ್ಗ), ಜವಳಿ ಮಂತ್ರಾಲಯ, ಭಾರತ ಸರ್ಕಾರದ ಪ್ರಾಯೋಜಕತ್ವದಲ್ಲಿ 12ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿರುವ ನಾಲ್ಕು ದಿನಗಳ ಜಿಲ್ಲಾ ಮಟ್ಟದ ಕೈಮಗ್ಗ ಮೇಳಕ್ಕೆ ಗುರುವಾರ ಶಾಸಕ ಟಿ.ಎಸ್. ಶ್ರೀವತ್ಸ ಚಾಲನೆ ನೀಡಿದರು.ಮೇಟಗಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಎಲ್. ಅರುಣ್, ಜೆಎಸ್ಎಸ್ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗ ಉಪನಿರ್ದೇಶಕ ಬಿ. ಇಳಂಗೋವನ್, ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.ಈ ನಾಲ್ಕು ದಿನಗಳ ಕೈಮಗ್ಗ ಮೇಳದಲ್ಲಿ ಕರ್ನಾಟಕದ ವಿವಿಧ ಭಾಗಗಳ ಕೈಮಗ್ಗ ಸಹಕಾರ ಸಂಘಗಳು ಮತ್ತು ನೇಕಾರರು ತಯಾರಿಸಿರುವ ರೇಷ್ಮೆ ಸೀರೆಗಳು, ಹತ್ತಿ ಸೀರೆಗಳು, ಶಾಲ್ಗಳು, ಟವೆಲ್ಗಳು, ಉಡುಪು ಬಟ್ಟೆಗಳು ಹಾಗೂ ವಿವಿಧ ಗುಣಮಟ್ಟದ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದೆ. ಗ್ರಾಹಕರು ನೇರವಾಗಿ ನೇಕಾರರಿಂದಲೇ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಧ್ಯವರ್ತಿಗಳಿಲ್ಲದೆ ಉತ್ತಮ ಗುಣಮಟ್ಟದ ಕೈಮಗ್ಗ ವಸ್ತುಗಳನ್ನು ಪಡೆಯುವುದರ ಜೊತೆಗೆ ರಾಜ್ಯದ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸುವ ಅವಕಾಶವನ್ನು ಹೊಂದಲಿದ್ದಾರೆ.ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕೈಮಗ್ಗ ಕ್ಷೇತ್ರಕ್ಕೆ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಹಾಗೂ ಸಾಧಕ ನೇಕಾರರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ.ಈ ಕೈಮಗ್ಗ ಮೇಳವು ಆ. 9ರವರೆಗೆ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್, ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 9ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತದೆ.ಮೇಳಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದ್ದು, ಉಚಿತ ವಾಹನ ನಿಲುಗಡೆ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.ಸಾರ್ವಜನಿಕರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಗುಣಮಟ್ಟದ ಕೈಮಗ್ಗ ಉತ್ಪನ್ನಗಳನ್ನು ಖರೀದಿಸುವ ಮೂಲಕ ನಮ್ಮ ನೇಕಾರರನ್ನು ಪ್ರೋತ್ಸಾಹಿಸಿ, ಭಾರತದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂಭ್ರಮಿಸುವಂತೆ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ ಆತ್ಮೀಯವಾಗಿ ಆಹ್ವಾನಿಸಿದೆ.