ಕನ್ನಡಪ್ರಭ ವಾರ್ತೆ ಮಂಡ್ಯ

ಯುವಕರು ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ದೂರದೃಷ್ಟಿ, ಶಿಕ್ಷಣಪರತೆ ಮತ್ತು ಸಾಮಾಜಿಕ ನ್ಯಾಯದ ಚಿಂತನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು. ಅವರು ಆಧುನಿಕ ಮೈಸೂರು ಸಂಸ್ಥಾನದ ನಿರ್ಮಾಪಕರಾಗಿದ್ದು, ಯುವಜನರಿಗೆ ಅವರ ಆದರ್ಶಗಳು ಸದಾ ಸ್ಫೂರ್ತಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವಾನಂದಮೂರ್ತಿ ರವರು ತಿಳಿಸಿದರು.

ಗುರುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೈಸೂರು ಮತ್ತು ಮಂಡ್ಯ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ರೈತರ ಕೃಷಿಗೆ ಅನುಕೂಲವಾಗಲು ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸಿ ರೈತರ ನೀರಾವರಿಯ ವ್ಯವಸ್ಥೆಯನ್ನು ಕಲ್ಪಿಸಿ ಅಪಾರ ಕೊಡುಗೆ ನೀಡಿದ್ದಾರೆ. ಏಷ್ಯಾದ ಮೊದಲ ಜಲವಿದ್ಯುತ್‌ ಕೇಂದ್ರವಾದ ಶಿವನಸಮುದ್ರ ಯೋಜನೆ ಆರಂಭಿಸಿ, ಮೈಸೂರು ಸಂಸ್ಥಾನಕ್ಕೆ ವಿದ್ಯುತ್ ಒದಗಿಸಿದರು ಎಂದು ತಿಳಿಸಿದರು.

ಎಲ್ಲರೂ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿ. ಎಲ್ಲಾ ಮಹಿಳೆಯರಿಗೆ ಉಚಿತ ಶಿಕ್ಷಣ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಕಲ್ಪಿಸಿದವರು ಹಾಗೂ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ಮೈಸೂರು ಸ್ಯಾಂಡಲ್‌ ಸೋಪ್‌ ಕಾರ್ಖಾನೆ, ಮತ್ತು ಕಾಗದದ ಕಾರ್ಖಾನೆಗಳನ್ನು ಸ್ಥಾಪಿಸಿ ನಾಡಿನ ಅಭಿವೃದ್ಧಿಗೆ ಶ್ರಮಿಸಿದರು ಎಂದು ತಿಳಿಸಿದರು.


ಬೆಂಗಳೂರು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ ಕೆಂಗೇರಿಯ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಅವಧಿಯಲ್ಲಿ 1918ರ ಆಗಸ್ಟ್ 3 ರಂದು ನಾಲ್ವಡಿಯವರು ''''''''ಸರ್ ಲೆಸ್ಲಿ ಮಿಲ್ಲರ್'''''''' ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವೊಂದನ್ನು ರಚಿಸಿ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಶೋಷಿತರಿಗೆ ಸಮಾನತೆ, ಸ್ವತಂತ್ರ, ಅಭಿವ್ಯಕ್ತಿ ಸ್ವತಂತ್ರ ಹಾಗೂ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರನ್ನಾಗಿಸಲು ಮೀಸಲಾತಿಯನ್ನು ಜಾರಿಗೆ ತಂದವರು ಅವರು ಎಂದು ತಿಳಿಸಿದರು.

ನಿವೃತ್ತ ಪ್ರಾಂಶುಪಾಲ ಮ.ರಾಮಕೃಷ್ಣ ರವರು ಮಾತನಾಡಿ, ಏಷ್ಯಾದ ಮೊದಲ ಜಲವಿದ್ಯುತ್ ಯೋಜನೆಯಾದ ಶಿವನಸಮುದ್ರ ಜಲವಿದ್ಯುತ್ ಯೋಜನೆಯನ್ನು 1902 ರಲ್ಲಿ ಆರಂಭಿಸಿದರು. ಭದ್ರಾವತಿ ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್), ಮೈಸೂರು ಸ್ಯಾಂಡಲ್‌ವುಡ್ ಆಯಿಲ್ ಫ್ಯಾಕ್ಟರಿ, ಮತ್ತು ಮೈಸೂರು ಪೇಪರ್ ಮಿಲ್ಸ್‌ಗಳನ್ನು ಸ್ಥಾಪಿಸಿದರು. ಬೆಂಗಳೂರು ನಗರಕ್ಕೆ 1905 ರಲ್ಲಿ ಏಷ್ಯಾದಲ್ಲೇ ಮೊದಲು ವಿದ್ಯುತ್ ದೀಪಗಳನ್ನು ಅಳವಡಿಸಲಾಯಿತು ಎಂದು ತಿಳಿಸಿದರು.

ಇಂದು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಆವರಣದಲ್ಲಿ ನಡೆದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಅಲಂಕೃತ ಭಾವಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿಗಳಾ ಬಿ.ಸಿ ಶಿವಾನಂದಮೂರ್ತಿ ರವರು ಚಾಲನೆ ನೀಡಿದರು.

ವಿವಿಧ ಕಲಾ ತಂಡಗಳ ಮೂಲಕ ಜಿಲ್ಲಾ ಕಚೇರಿಯಿಂದ ಸಂಜಯ ವೃತ್ತ ,ಮಹಾವೀರ ವೃತ್ತ, ವಿ.ವಿ. ರಸ್ತೆ ಮೂಲಕ ಅಂಬೇಡ್ಕರ್ ಭವನವನ್ನು ತಲುಪಲಿತು.

ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿಡಿಪಿಐ ಲೋಕೇಶ್, ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ನ ಅಧ್ಯಕ್ಷರಾದ ತಗ್ಗಹಳ್ಳಿ ವೆಂಕಟೇಶ್, ದೇವರಾಜ ಅರಸು ಹಿಂದುಳಿದ ವರ್ಗಗಳ ಅಧ್ಯಕ್ಷ ಎಲ್. ಸಂದೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಬಿ.ವಿ.ನಂದೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ಚಲುವಯ್ಯ ಇತರರಿದ್ದರು.