ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನವು ಅ.26, 27ರಂದು ಮೈಸೂರಿನಲ್ಲಿ ನಡೆಯಲಿದೆ ಇದರಲ್ಲಿ ಎಲ್ಲಾ ವರ್ಗದ ಕಾರ್ಮಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸೆಕ್ರೆಟೇರಿಯಟ್ ಸದಸ್ಯ ಚಂದ್ರಶೇಖರ್ ಮೇಟಿ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಮನವಿ ಮಾಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ದೀರ್ಘಕಾಲ ಆಳಿದ ಕಾಂಗ್ರೆಸ್ ಹಾಗೂ ಪ್ರಸಕ್ತ ಬಿಜೆಪಿ ಸರ್ಕಾರ ಜಾರಿಗೆ ತಂದ ಜಾಗತೀಕರಣ, ಖಾಸಗೀಕರಣ ಮತ್ತು ಉದಾರೀಕರಣ ನೀತಿಗಳು ದೇಶದ ಸಂಪತ್ತು ಹಾಗೂ ಕಾರ್ಮಿಕರ ಶ್ರಮಶಕ್ತಿಯನ್ನು ಲೂಟಿ ಮಾಡಲು ಅನುವು ಮಾಡಿಕೊಟ್ಟಿವೆ ಇದರ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಿ, ಮುಂದಿನ ನಮ್ಮ ಹೋರಾಟದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.ಕೇಂದ್ರದ ಬಿಜೆಪಿ ಸರ್ಕಾರವು ಕಾರ್ಮಿಕ ಕಾಯ್ದೆಗಳನ್ನು ಮಾಲೀಕರ ಪರವಾಗಿ ತಿದ್ದುಪಡಿ ಮಾಡಿ ೪ ಲೇಬರ್ ಕೋಡ್ (ಕಾರ್ಮಿಕ ಸಂಹಿತೆ)ಗಳನ್ನು ರೂಪಿಸಿದೆ. ಕರ್ನಾಟಕದಲ್ಲೂ ಕಾಯ್ದೆಯಲ್ಲಿ ತಿದ್ದುಪಡಿ ತಂದು ದುಡಿಮೆಯ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಏರಿಸಿದೆ. ಕಾರ್ಮಿಕರಿಂದ ಸಾಕಷ್ಟು ವಿರೋಧವಿದ್ದರೂ, ಈಗಿನ ಕಾಂಗ್ರೆಸ್ ಸರ್ಕಾರ ಈ ನೀತಿಯನ್ನು ಮುಂದುವರೆಸಿದೆ ಇದರ ಬಗ್ಗೆ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಾಗಿದೆ ಎಂದರು. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡುವುದಾಗಿ ಭರವಸೆ ನೀಡಿಯೂ, ಇದುವರೆಗೂ ಜಾರಿ ಮಾಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದರು.ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ಖಾಸಗೀ ವಲಯದಲ್ಲಿ ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಂಡಿರುವ ಗುತ್ತಿಗೆ ಕಾರ್ಮಿಕರು ಕ್ರೂರ ಶೋಷಣೆಗೆ ಒಳಗಾಗುತ್ತಿದ್ದಾರೆ. ಆಶಾ, ಅಂಗನವಾಡಿ ಮತ್ತು ಬಿಸಿ ಊಟ ಕಾರ್ಯಕರ್ತೆಯರಿಗೆ ಕನಿಷ್ಠ ವೇತನವೂ ನೀಡುತ್ತಿಲ್ಲ. ಗಿಗ್ ಮತ್ತು ಪ್ಲಾಟ್ ಪಾರಂ ಕಾರ್ಮಿಕರಿಗೆ ಯಾವುದೇ ಭದ್ರತೆಗಳಿಲ್ಲ. ಬೆಲೆ ಏರಿಕೆ, ಹಣದುಬ್ಬರಗಳಿಂದ ತತ್ತರಿಸುವ ದುಡಿಯುವ ಜನರ ಜೀವನ ಸಂಕಟಮಯವಾಗುತ್ತಿದೆ. ಇಂದಿನ ಬೆಲೆ ಏರಿಕೆಗೆ ಅನುಗುಣವಾಗಿ ಕುಟುಂಬ ನಿರ್ವಹಣೆಗೆ ಬೇಕಿರುವ ಕನಿಷ್ಟ ವೇತನ ರು.35,000/-. ಇದನ್ನು ನಿಗದಿಪಡಿಸುವ ಬಗ್ಗೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಜಾರಿಯಾಗಬೇಕಾಗಿದ್ದ ಇಎಸ್ಐ-ಪಿಎಫ್ ಸೌಲಭ್ಯವನ್ನು ಜಾರಿ ಮಾಡದೇ ವಂಚಿಸಲಾಗುತ್ತಿದೆ.ಇಂತಹ ಪರಿಸ್ಥಿತಿಯಲ್ಲಿ ಎಐಯುಟಿಯುಸಿ ಕರ್ನಾಟಕ ರಾಜ್ಯ ಸಮಿತಿಯ ನಾಯಕತ್ವದಲ್ಲಿ ಸಂಘಟಿತ-ಅಸಂಘಟಿತ ವಲಯಗಳ ಕಾರ್ಮಿಕರ ಈ ಮೇಲಿನ ಜ್ವಲಂತ ಸಮಸ್ಯೆಗಳ ವಿರುದ್ಧ ರಾಜ್ಯದಾದ್ಯಂತ ನಿರಂತರವಾಗಿ ಚಳವಳಿಗಳನ್ನು ಬೆಳೆಸುತ್ತಿದೆ. ರಾಜ್ಯದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಹಲವಾರು ಗೊತ್ತುವಳಿಗಳನ್ನು ಮಂಡಿಸಿ ಸಮಗ್ರವಾಗಿ ಚರ್ಚಿಸಿ ಮುಂದಿನ ಹೋರಾಟದ ನಿರ್ಣಯಗಳನ್ನು ಈ ರಾಜ್ಯ ಮಟ್ಟದ ಸಮ್ಮೇಳನವು ಕೈಗೊಳ್ಳಲಿದೆ ಎಂದರು.ಸಮ್ಮೇಳನದ ಬಹಿರಂಗ ಅಧಿವೇಶನವು ಅ.26 ರಂದು ಮಧ್ಯಾಹ್ನ 12ಕ್ಕೆ ಟೌನ್ ಹಾಲ್ ಮೈದಾನದಲ್ಲಿ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷ ಕಾ. ಕೆ.ರಾಧಾಕೃಷ್ಣ ಮಾಡುವರು. ಮುಖ್ಯ ಭಾಷಣಕಾರರಾಗಿ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ, ಶಂಕರ್ ದಾಸ್ ಗುಪ್ತ ಮಾತನಾಡುವರು. ರಾಜ್ಯ ಅಧ್ಯಕ್ಷ ಕಾ. ಕೆ.ಸೋಮಶೇಖರ್ ಭಾಷಣಕಾರರಾಗಿ ಮಾತನಾಡುವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾರ್ಯದರ್ಶಿ ಕಾ. ಕೆ.ಸೋಮಶೇಖರ್ ಯಾದಗಿರಿ ವಹಿಸಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ರಾಜ್ಯ ಸೆಕ್ರೆಟೇರಿಯಟ್ ಸದಸ್ಯರಾದ ಕಾ.ಚಂದ್ರಶೇಖರ್ ಮೇಟಿ ಆಡಲಿದ್ದಾರೆ. ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷರು ಆದ ಉಗ್ರನರಸಿಂಹೇಗೌಡ ಸ್ವಾಗತ ಮಾಡುವರು.ಈ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಕೈಗಾರಿಕಾ ಕಾರ್ಮಿಕರು, ವೈದ್ಯಕೀಯ ಕಾಲೇಜು, ಸರ್ಕಾರಿ ಹಾಸ್ಟೆಲ್, ವಿಶ್ವವಿದ್ಯಾಲಯ ಹಾಗೂ ಇನ್ನಿತರ ಕ್ಷೇತ್ರಗಳ ಗುತ್ತಿಗೆ ಕಾರ್ಮಿಕರು, ಗಣಿ ಕಾರ್ಮಿಕರು, ವಿದ್ಯುತ್ ಕ್ಷೇತ್ರದ ನೌಕರರು, ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು, ಇನ್ನಿತರ ಕ್ಷೇತ್ರಗಳ ಕಾರ್ಮಿಕರು ಸುಮಾರು 5 ಸಾವಿರಕ್ಕೂ ಹೆಚ್ಚು ವಿವಿಧ ಸಂಘಟನೆಯ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯರಾದ ಉಮಾದೇಮಿ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಂಘದ ಅಧ್ಯಕ್ಷ ಶೃಂಗೇಶ್, ಸಿಮ್ಸ್ನ ಕಾರ್ಮಿಕರ ಸಂಘ ಪ್ರಧಾನ ಕಾರ್ಯದರ್ಶಿ ಮಹದೇವು, ಆಶಾ ಕಾಯಕರ್ತೆತಯರ ಸಂಘದ ಅಧ್ಯಕ್ಷೆ ಕವಿತಾ ಇದ್ದರು.