ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ದೀಕ್ಷಾ ದಿನೋತ್ಸವದ ಪ್ರಯುಕ್ತ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಸೋಮವಾರ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರಕ್ಕೆ ಚಾಲನೆ ನೀಡಿದ ಆಸ್ಪತ್ರೆ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮು ಮಾತನಾಡಿ, ಆರೋಗ್ಯ ಇಲಾಖೆ ಬೆನ್ನುಲುಬಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು ಇಲಾಖೆ ಹಾಗೂ ಕುಟುಂಬದ ಕೆಲಸ ಒತ್ತಡದ ನಡುವೆ ತಮ್ಮ ಆರೋಗ್ಯದ ಕಡೆ ಗಮನ ಹರಿಸುವುದಿಲ್ಲ. ಪರಿಣಾಮ ಅನೇಕ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದರು.

ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ದೀಕ್ಷಾ ದಿನೋತ್ಸವದ ಪ್ರಯುಕ್ತ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸಮಗ್ರ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡು ತಮ್ಮ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಬೇಕು ಎಂದರು.

ಶಿಬಿರದಲ್ಲಿ ಪಾಲ್ಗೊಂಡಿದ್ದ ತಾಲೂಕಿನ 120ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಉಚಿತವಾಗಿ ರಕ್ತ ಪರೀಕ್ಷೆ, ಇಸಿಜಿ, 2ಡಿ ಎಕೋ, ಗರ್ಭದ ಅಲ್ಟ್ರಾಸೌಂಡ್, ಪ್ಯಾಪ್ ಸ್ಮಿಯರ್ ಪರೀಕ್ಷೆ ನಡೆಸಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಹಾಗೂ ಸಮಾಲೋಚನೆ ನಡೆಸಿ, ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ವೈದ್ಯಕೀಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಲಾಯಿತು.


ಈ ವೇಳೆ ಆಸ್ಪತ್ರೆ ಸಾರ್ವಜನಿಕ ಸಂಪರ್ಕಾಧಿಕಾರಿ ವೈ.ಪಿ.ಧಮೇಂದ್ರ, ವೈದ್ಯರಾದ ಡಾ.ಕೆ.ಎಂ.ಶಿವಕುಮಾರ್, ಡಾ.ಮಹೇಂದ್ರ, ಡಾ.ಶಶಿಕುಮಾರ್, ಡಾ.ಕೆ.ಎಸ್.ರವಿ, ಡಾ.ನಿಹಾರಿಕಾಶೆಟ್ಟಿ ಸೇರಿದಂತೆ ಹಲವರು ಇದ್ದರು.