ಸಾರಾಂಶ
ಕನ್ನಡಪ್ರಭ ವಾರ್ತೆ ಅರಕಲಗೂಡು
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಸನ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗ ಹಾಗೂ ಸಂತೆಮರೂರು ಗ್ರಾಮ ಪಂಚಾಯತಿ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ದುಮ್ಮಿ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಉಚಿತ ಶಿಬಿರ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಅವರು ಮಾತನಾಡಿ, ಅರೋಗ್ಯ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಸನದ ಅಡಿಯಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಹಾಸನ ಜಿಲ್ಲೆಯಲ್ಲಿ ನೂರು ಹೈ ರಿಸ್ಕ್ ಇರುವಂತಹ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳಲ್ಲಿ ವಲಸಿಗರು ಹಾಗೂ ಟ್ರಕ್ಕರ್ ಮತ್ತು ಡ್ರೈವರ್ ಮುಂತಾದ ರಿಸ್ಕ್ ವರ್ತನೆಯಲ್ಲಿರುವಂತ ಜನರನ್ನ ಗುರುತಿಸಿ ಅವರುಗಳಿಗೆ ಸೂಕ್ತವಾದ ಎಚ್ಐವಿ ತಪಾಸಣೆಗಳನ್ನು ಮಾಡುವುದರ ಮೂಲಕ ಪ್ರತಿಯೊಂದು ಗ್ರಾಮಗಳಲ್ಲಿಯೂ ಈ ರೀತಿಯಲ್ಲಿ ತಪಾಸಣಾ ಶಿಬಿರಗಳ ಮೂಲಕ ಎಚ್ಐವಿ ಕಾಯಿಲೆ ಹರಡುವ ವಿಧಾನ ಹಾಗೂ ಎಚ್ಐವಿ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳನ್ನ ಕುರಿತು ಜನರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದರು.ಇತ್ತೀಚಿನ ದಿನಗಳಲ್ಲಿ ಪುರುಷ- ಪುರುಷರಲ್ಲಿ (ಸಲಿಂಗಕಾಮ) ಲೈಂಗಿಕ ಕ್ರಿಯೆ ಹೆಚ್ಚು ಕಂಡು ಬರುತ್ತಿರುವುದರಿಂದ ಎಚ್ಐವಿ ಖಚಿತ ಪ್ರಕರಣಗಳು ಯುವಕರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವುದು ನೋವಿನ ಸಂಗತಿಯಾಗಿದೆ. ಆದ್ದರಿಂದ ಈ ರೀತಿಯ ತಪಾಸಣಾ ಶಿಬಿರಗಳ ಮೂಲಕ ಪ್ರತಿಯೊಂದು ಗ್ರಾಮಗಳಲ್ಲಿ ಎಚ್ಐವಿ ಕಾಯಿಲೆ ಕುರಿತು ಜನರಲ್ಲಿ ಜಾಗೃತಿ ಹಾಗೂ ತಪಾಸಣೆ ಕೈಗೊಳ್ಳುವುದು ಶಿಬಿರದ ಉದ್ದೇಶವಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹಾಗೂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಡೆಂಘೀ ಖಚಿತ ಪ್ರಕರಣಗಳು ಕಂಡು ಬರುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆಯನ್ನ ಕಾಪಾಡಿಕೊಳ್ಳಬೇಕು ಹಾಗೂ ಸೊಳ್ಳೆಯಿಂದ ರಕ್ಷಣೆ ಪಡೆಯುವಂತಹ ಮಾರ್ಗೋಪಾಯಗಳನ್ನ ಅನುಸರಿಸಿಕೊಂಡು ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಭೇಟಿಯಾಗಿ ರಕ್ತ ತಪಾಸಣೆಗಳನ್ನ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದ ಒತ್ತಡ ಹಾಗೂ ಮಧುಮೇಹ ಕಾಯಿಲೆಗಳನ್ನು ಪತ್ತೆ ಮಾಡುವುದು, ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ಎಚ್ಐವಿ ಅಂತ ಮಾರಕ ಕಾಯಿಲೆಗಳನ್ನು ಪತ್ತೆ ಹಚ್ಚುವಂತಹ ಕಾರ್ಯಕ್ರಮ ಈ ರೀತಿಯ ಶಿಬಿರಗಳಲ್ಲಿ ಕಂಡುಬರುತ್ತದೆ. ಆದ್ದರಿಂದ ಜನರು ಈ ರೀತಿಯ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಈ ಶಿಬಿರದಲ್ಲಿ ಸುಮಾರು 65ಕ್ಕೂ ಹೆಚ್ಚು ಜನರು ಭಾಗವಹಿಸಿ ಮಧುಮೇಹ, ಅಧಿಕ ರಕ್ತದ ಒತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಂಡರು. ಸಂತೆಮರೂರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರಾಜೇಗೌಡ, ಕಾರ್ಯದರ್ಶಿ ಮಂಜುನಾಥ, ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞರಾದ ಗೌರಮ್ಮ, ಎನ್ಸಿಡಿ ವಿಭಾಗದ ಆಪ್ತಸಮಾಲೋಚಕ ಉಮೇಶ್, ಶುಶ್ರೂಷಕರಾದ ಲಲಿತಾ, ಹಾಸನದ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಘದ ಕ್ಷೇತ್ರ ಕಾರ್ಯಕರ್ತರಾದ ಚಂದ್ರಶೇಖರ್, ಆಶಾ ಕಾರ್ಯಕರ್ತೆ ರೂಪಾ, ಪಂಚಾಯಿತಿಯ ಸಿಬ್ಬಂದಿ ವರ್ಗದವರು ಶಿಬಿರದಲ್ಲಿ ಭಾಗವಹಿಸಿದ್ದರು.