ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಪೌರ ಕಾರ್ಮಿಕರಿಗೆ ಶೀಘ್ರದಲ್ಲೇ ಉಚಿತವಾಗಿ ಮನೆಗಳ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.ಪಟ್ಟಣದ ಪುರಸಭೆ ಆವರಣದ ಸಿಡಿಎಸ್ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಿ ಮಾತನಾಡಿ, ನಗರೋದ್ಥಾನ ಇಲಾಖೆ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆ ಅಡಿ 1.92 ಲಕ್ಷ ರು.ವೆಚ್ಚದಲ್ಲಿ ಸಿದ್ಧಾರ್ಥ ನಗರ ಬಡಾವಣೆಯಲ್ಲಿ 16 ಮನೆಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ಕಾಯಂ ಪೌರಕಾರ್ಮಿಕರಿಗೆ ಮನೆಗಳನ್ನು ವಿತರಣೆ ಮಾಡಲಾಗುವುದು ಎಂದರು.
ನಗರ ಮತ್ತು ಪಟ್ಟಣ ಪ್ರದೇಶಗಳ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅಪಾರವಾಗಿದೆ. ಇಂಥ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿತ್ತು. ಈಗ ಮನೆಗಳ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ ಎಂದರು.ಜೀವನದ ಅವಿಭಾಜ್ಯ ಅಂಗವಾಗಿರುವ ಪರಿಸರವನ್ನು ರಕ್ಷಣೆ ಮಾಡದಿದ್ದರೆ ಮನುಷ್ಯನ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ಪರಿಸರ ಮಾಲಿನ್ಯ, ಜಾಗತಿಕ ತಾಪಮಾನ ಇಂದಿನ ದುರಂತಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಜನರು ತಮ್ಮ ಪರಿಸರದ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪುರಸಭಾಧ್ಯಕ್ಷೇ ಕೋಕಿಲ ಅರುಣ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಧಿಕಾರಿ ಮೀನಾಕ್ಷಿ, ಉಪಾಧ್ಯಕ್ಷ ಟಿ. ಆರ್. ಪ್ರಸನ್ನ ಕುಮಾರ್, ಸ್ಥಾಯಿ ಸಮಿತಿಅಧ್ಯಕ್ಷೇ ವನಿತಾ, ಸದಸ್ಯರಾದ ಮಹೇಶ್, ಸುರೇಶ್ ಕುಮಾರ್, ಸರ್ವ ಮಂಗಳ, ಪ್ರಮೀಳಾ, ಬಸವರಾಜು, ಕಮಲನಾಥ್, ಸಿದ್ದರಾಜು, ಆಯೀಷಾ, ಶೋಭಾ ಮರಿ, ಪರಿಸರ ಅಭಿಯಂತರೆ ಅರ್ಚನಾ ಭಾಗವಹಿಸಿದ್ದರು.ಕ್ಷೇತ್ರದ ಅಭಿವೃದ್ಧಿಯಿಂದ ಸರಿಯುವ ಪ್ರಶ್ನೆಯೇ ಇಲ್ಲ: ಕೆ.ಎಂ.ಉದಯ್ಮದ್ದೂರು:
ಯಾವುದೇ ಟೀಕೆ ಟಿಪ್ಪಣಿಗಳು ಎದುರಾದರೂ ಸಹ ಮದ್ದೂರು ಕ್ಷೇತ್ರದ ಅಭಿವೃದ್ಧಿಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.ಪಟ್ಟಣದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕೀರ್ತಿ ಶೇಷರಾದ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಸೇರಿದಂತೆ ಘಟಾನುಗಟಿ ನಾಯಕರು ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇದರಿಂದ ಕ್ಷೇತ್ರ ತನ್ನದೇ ಆತ ಇತಿಹಾಸವನ್ನು ಹೊಂದಿದೆ. ಈ ನಾಯಕರಗಳ ನಂತರ ಕ್ಷೇತ್ರ ಅಭಿವೃದ್ಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಿಂದೆ ಬಿದ್ದಿದೆ ಎಂದು ವಿಷಾದಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ಅಭಿವೃದ್ಧಿ ದೃಷ್ಟಿಯಿಂದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ. ಹೀಗಾಗಿ ಜನರ ಋಣ ತೀರಿಸುವುದು ನನ್ನ ಆಧ್ಯ ಕರ್ತವ್ಯ ವಾಗಿದೆ. ನನ್ನ ವಿರುದ್ಧ ಯಾವುದೇ ಟೀಕೆ ಟಿಪ್ಪಣಿಗಳು ಬಂದರು ಸಹ ಅಭಿವೃದ್ಧಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.