ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಸರ್ಜಿ ಫೌಂಡೇಶನ್ ಮತ್ತು ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಪೊಲೀಸ್ ಹುದ್ದೆಗಳಿಗೆ ಸೇರಬಯಸುವ ಆಕಾಂಕ್ಷಿಗಳಿಗೆ ಜುಲೈ 1 ರಂದು ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯ ಸ್ಪರ್ಧಾಕಾಂಕ್ಷಿಗಳಿಗೆ ಜುಲೈ 1ರಂದು ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಒಂದು ದಿನದ ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದರು.
ಈ ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತಜ್ಞರಾದ ಸೋಮಪ್ಪ ಡುಂಡಿಗೆರೆ ಮತ್ತು ನಾಗರಾಜ್ ರೆಡ್ಡಿ ಅವರು ಭಾಗವಹಿಸಿ, ಇತ್ತೀಚಿನ ಪರೀಕ್ಷಾ ಪದ್ಧತಿ, ಪ್ರಶ್ನೆಪತ್ರಿಕೆ ವಿಶ್ಲೇಷಣೆ, ದೈಹಿಕ ಪರೀಕ್ಷೆಯ ವಿಧಾನಗಳು, ಪಠ್ಯಕ್ರಮ, ಪರೀಕ್ಷೆ ಎದುರಿಸಲು ಸರಳ ತಂತ್ರಗಳು ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿನ ಇತ್ತೀಚಿನ ಬದಲಾವಣೆಗಳ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಕಾರ್ಯಾಗಾರದ ನಂತರ ಕಾಯಕಸೇತು ಪರೀಕ್ಷಾಪಥ ಎಂಬ ಶೀರ್ಷಿಕೆಯಡಿ 30 ದಿನಗಳ ಉಚಿತ ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮವನ್ನು ಲೋಕಾರ್ಪಣೆ ಮಾಡಲಾಗುವುದು. ಈ ತರಬೇತಿಯು ಜೂ.29ರಂದು ಸೋಮವಾರದಿಂದ ಪ್ರಾರಂಭವಾಗಲಿದ್ದು, ಪ್ರತಿದಿನ ಬೆಳಗ್ಗೆ 2 ಗಂಟೆ ಮತ್ತು ಸಂಜೆ 2 ಗಂಟೆಗಳ ಕಾಲ ನುರಿತ ಉಪನ್ಯಾಸಕರಿಂದ ಬೋಧನೆ ನೀಡಲಾಗುವುದು ಎಂದು ವಿವರಿಸಿದರು.ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನ ಮತ್ತು ಸಮಯ ನಿರ್ವಹಣಾ ಕೌಶಲ್ಯವನ್ನು ಹೆಚ್ಚಿಸಲು ಪ್ರತಿದಿನ ಮತ್ತು ವಾರಕ್ಕೊಮ್ಮೆ ಟೆಸ್ಟ್ ಸೀರೀಸ್ ನಡೆಸಲಾಗುತ್ತದೆ. ಅಲ್ಲದೆ, ಭಾಗವಹಿಸುವ ಅಭ್ಯರ್ಥಿಗಳಿಗೆ ಡಿಜಿಟಲ್ ರೂಪದಲ್ಲಿ ಸಮಗ್ರ ಸ್ಟಡಿ ಮೆಟೀರಿಯಲ್’ (ಕ್ಲಾಸ್ ನೋಟ್ಸ್) ಅನ್ನು ಉಚಿತವಾಗಿ ಒದಗಿಸಲಾಗುತ್ತದೆ. 30 ದಿನಗಳ ಆನ್ಲೈನ್ ತರಬೇತಿಗೆ ಕೇವಲ 1000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಕಾಯಕ ಸೇತು ಜಾಬ್ ಪೋರ್ಟಲ್ ಮೂಲಕ ಕಡ್ಡಾಯವಾಗಿ ಆನ್ಲೈನ್ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿಸಿಕೊಂಡ ಅರ್ಹ ಪದವೀಧರ ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಪರಿಗಣಿಸಲಾಗುವುದು. ಮಲೆನಾಡು ಭಾಗದ ವಿದ್ಯಾವಂತ ಯುವಜನತೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಜೂನ್ 8 ರಿಂದ 13 ರವರೆಗೆ ನಡೆದ ಕಾಯಕಸೇತು ಉದ್ಯೋಗ ಸಂದರ್ಶನದಲ್ಲಿ 600ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಂಡಿದ್ದು, 404 ಅಭ್ಯರ್ಥಿಗಳು ಆಯ್ಕೆಯಾಗಿ ನೇಮಕಾತಿ ಪತ್ರ ಪಡೆದಿದ್ದಾರೆ. ಕಳೆದ 8 ತಿಂಗಳ ಅಲ್ಪ ಅವಧಿಯಲ್ಲಿ ಕಾಯಕಸೇತು ಜಾಬ್ ಪೋರ್ಟಲ್ 544 ಯುವಜನರಿಗೆ ಉದ್ಯೋಗ ಕಲ್ಪಿಸಿಕೊಟ್ಟಿದೆ ಎಂಂದರು
ಗೋಷ್ಠಿಯಲ್ಲಿ ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷ ಘನಶ್ಯಾಮ್ ಜಿ ಗಿರಿಮಾಜಿ, ಕಾರ್ಯಕ್ರಮ ಕಾರ್ಯಾಧ್ಯಕ್ಷ ವಿಕಾಸ್ ಹೆಗ್ಡೆ, ಮತ್ತು ಪೂರ್ವ ವಲಯ ಅಧಿಕಾರಿ ಜೆ.ಸಿ ಕಿರಣ್ ಕುಮಾರ್ ಉಪಸ್ಥಿತರಿದ್ದರು.