ಸಾರಾಂಶ
-ಸರ್ಕಾರದ ಯಶಸ್ವಿ ಕಾರ್ಯಗಳಿಂದ ವಿಚಲಿತಗೊಂಡಿರುವ ವಿಪಕ್ಷಗಳು
ಕನ್ನಡಪ್ರಭ ವಾರ್ತೆ ಹೊಸಕೋಟೆದೇಶ ಕಂಡ ಶುದ್ಧಹಸ್ತ ಹಾಗೂ ಕಳಂಕರಹಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಷಡ್ಯಂತ್ರ ರೂಪಿಸಿ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳಿಂದ ನಡೆಯುತ್ತಿದ್ದು ಇದು ಯಾವುದೇ ಕಾರಣಕ್ಕೂ ಫಲಿಸುವುದಿಲ್ಲ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೩೬ ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಬಡವರ ಪರ ನಿಂತಿದೆ. ಇದರಿಂದ ವಿಚಲಿತಗೊಂಡಿರುವ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಕಳಂಕ ತಂದು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಿವೆ. ಅಷ್ಟೇ ಅಲ್ಲದೆ ಪಾದಯಾತ್ರೆ ಮೂಲಕ ಕಾಂಗ್ರೆಸ್ ಸರ್ಕಾರವನ್ನು ದುರ್ಬಲಗೊಳಿಸಿ ಜನರ ದಿಕ್ಕು ತಪ್ಪಿಸುತ್ತಿವೆ. ಇಂತಹ ಕುತಂತ್ರ ಕೆಲಸಗಳು ಎಂದೂ ಫಲ ಕೊಡುವುದಿಲ್ಲ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಹೇಮಲತಾ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್ ಜನರ ಕಷ್ಟವನ್ನು ಆಲಿಸುವುದು ಬಿಟ್ಟು ಪಾದಯಾತ್ರೆ ಹೆಸರಿನಲ್ಲಿ ಸಿದ್ದರಾಮಯ್ಯನವರ ಮೇಲೆ ರಾಜಕೀಯ ಹುನ್ನಾರ ಮಾಡುತ್ತಿರುವುದು ಸರಿಯಲ್ಲ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಮಮತಾಗೌಡ ಮಾತನಾಡಿ, ಹಗರಣ ಮುಕ್ತ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯನವರ ಮೇಲೆ ಮುಡಾ ಹಗರಣ ಮುಂದಿಟ್ಟುಕೊಂಡು ಕಳಂಕ ತರುತ್ತಿರುವುದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಶೋಭೆ ತರಲ್ಲ ಎಂದರು.ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸರೋಜಾ, ಪ್ರಧಾನ ಕಾರ್ಯದರ್ಶಿ ಮಂಜುಳ ಕೋಟೆ ಪ್ರಕಾಶ್, ಕಾರ್ಯದರ್ಶಿ ವಾಣಿ, ಮಂಜುಳ, ಸೂಲಿಬೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ಅನುಗೊಂಡನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾ ರೆಡ್ಡಿ, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯೆ ರಮಾ, ಕಾಂಗ್ರೆಸ್, ಮುಖಂಡರಾದ ಶಾಂತಮ್ಮ ಸೇರಿ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.