ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ಸಂವಿಧಾನದತ್ತವಾಗಿ ಬಂದಿರುವ ಹಕ್ಕುಗಳನ್ನು ಎಲ್ಲರೂ ಚಲಾಯಿಸುತ್ತೇವೆ. ಆದರೆ ಕರ್ತವ್ಯಗಳನ್ನು ಮರೆತಿದ್ದೇವೆ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಆಯೋಗದ ಅಧ್ಯಕ್ಷ ಟಿ.ಜಿ. ಶಿವಶಂಕರೇಗೌಡ ತಿಳಿಸಿದರು.ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ಸ್ಥಳ ಮುದ್ದೇನಹಳ್ಳಿಯಲ್ಲಿನ ಸರ್.ಎಂ.ವಿ. ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸ್ಮಾರಕದ ಬಳಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮದ ಭಾಗವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಈ ಬಗ್ಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಒತ್ತು ನೀಡಿ ಹೇಳಿದ್ದಾರೆ. ನಮ್ಮ ಇಂದಿನ ಮತ್ತು ಮುಂದಿನ ಪೀಳಿಗೆಯ ಉಳಿವಿಗಾಗಿ ಪರಿಸರ ಸಂರಕ್ಷಿಸಿಕೊಳ್ಳುವುದು ಆದ್ಯ ಕರ್ತವ್ಯ. ಆ ನಿಟ್ಟಿನಲ್ಲಿ ನಾವೆಲ್ಲರೂ ಗಿಡಗಳನ್ನು ನೆಟ್ಟು ಪೋಷಿಸುವ ಅಗತ್ಯ ನಮ್ಮ ಮೇಲಿದೆ. ಇದರ ಭಾಗವಾಗಿ ಚಿಕ್ಕಬಳ್ಳಾಪುರ ನ್ಯಾಯಾಂಗ ಮತ್ತು ಜಿಲ್ಲಾಡಳಿತದ ಆಡಳಿತ ವರ್ಗಗಳು 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ತಿಳಿಸಿದರು.
5 ಕೋಟಿ ಗಿಡ ಪೋಷಣೆ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ. ರಾಮಲಿಂಗೇಗೌಡ ಮಾತನಾಡಿ, ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ತೋರುತ್ತಿದೆ ಎಂದರು.ಈಗಾಗಲೇ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಕಳೆದ ಏಪ್ರಿಲ್ನಲ್ಲಿ ಚಾಲನೆ ದೊರಕಿದೆ. ಅದರ ಮುಂದುವರಿದ ಭಾಗವಾಗಿ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕದ ಬಳಿ 5 ಗುಂಟೆ ಜಮೀನಿನಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಈ ವರ್ಷ 5 ಲಕ್ಷ ಗಿಡಗಳನ್ನು ಮುಂಗಾರು ಮಳೆಯ ಅವಧಿಯಲ್ಲಿ ನೆಡಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೂಡಿ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುವುದು. ನೆಟ್ಟ ಗಿಡಗಳ ಪೈಕಿ ಶೇ. 80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೊಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.ಈ ವೇಳೆ ನ್ಯಾಯಾಧೀಶರಾದ ಕಾಂತರಾಜ್, ಉಮೇಶ್, ಭಾರತಿ ಎಂ, ಬಿ.ಶಿಲ್ಪ, ಎಸ್ಪಿ ಕುಶಲ್ ಚೌಕ್ಸೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್, ಸರ್.ಎಂ.ವಿಶ್ವೇಶ್ವರಯ್ಯ ಸೇವಾ ಟ್ರಸ್ಟ್ಅಧ್ಯಕ್ಷ ಸತೀಶ್ ಮೋಕ್ಷಗುಂಡಂ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಸಿಕೆಬಿ-4
ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ಸ್ಥಳ ಮುದ್ದೇನಹಳ್ಳಿಯಲ್ಲಿನ ಸರ್.ಎಂ.ವಿ. ಸ್ಮಾರಕದ ಬಳಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮದ ಭಾಗವಾಗಿ ರಾಜ್ಯ ಗ್ರಾಹಕ ವ್ಯಾಜ್ಯಗಳ ಆಯೋಗದ ಅಧ್ಯಕ್ಷ ಟಿ.ಜಿ. ಶಿವಶಂಕರೇಗೌಡ ಗಿಡ ನೆಡುವ ಮೂಲಕ ಚಾಲನೆ ನೀಡಿದರು