ಕನ್ನಡಪ್ರಭ ವಾರ್ತೆ ಮೂಡಲಗಿ
ಬೆಳಗಾವಿಯ ಹೊಸ ವಂಟಮೂರಿಯ ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ರಾಜು ಭಾಷ್ಕರ್ ಹಿರೇಹೊಳಿ(42) ಅಪಘಾತದಲ್ಲಿ ಸಾವನ್ನಪ್ಪಿದ್ದು, ಹುಟ್ಟೂರಾದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.ಯೋಧನ ಪಾರ್ಥಿವ ಶರೀರವನ್ನು ಗ್ರಾಮಸ್ಥರು, ಗಣ್ಯರು, ನಿವೃತ್ತ ಯೋಧರು ಬರಮಾಡಿಕೊಂಡರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು. ದಾರಿಯುದ್ದಕ್ಕೂ ಪುಷ್ಪವೃಷ್ಟಿಗೈದು ಭಾರತ ಮಾತಾಕೀ ಜೈ, ಅಮರ ರಹೇ ರಾಜು, ಮತ್ತೆ ಹುಟ್ಟಿ ಬಾ ರಾಜು ಘೋಷಣೆಗಳು ಮುಗಿಲು ಮಟ್ಟಿದ್ದವು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನರ ಅಂತಿಮ ದರ್ಶನಕ್ಕೆ ಕೆಲಹೊತ್ತು ವ್ಯವಸ್ಥೆ ಮಾಡಲಾಗಿತ್ತು. ತಾಲೂಕು ಆಡಳಿತ, ಗ್ರಾಮ ಪಂಚಾಯಿತಿಯಿಂದ ಯೋಧನ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು.ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಗ್ರಾಮದ ರುದ್ರಭೂಮಿಯಲ್ಲಿ ಯೋಧನ ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು. ತಹಸೀಲ್ದಾರ್ ಶ್ರೀಶೈಲ್ ಗುಡಮೆ, ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕರು, ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಐಟಿಬಿಪಿ ಅಧಿಕಾರಿಗಳು ಯೋಧನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.ಸಂತಾಪ: ಯೋಧ ರಾಜು ಹಿರೇಹೊಳಿ ನಿಧನಕ್ಕೆ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ