ಹೊಸಕೋಟೆ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿದ್ದು ರಾಜ್ಯದಲ್ಲಿ ಅಭಿವೃದ್ಧಿಗೆ ಮತ್ತಷ್ಟು ವೇಗ ದಕ್ಕಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು

ಹೊಸಕೋಟೆ: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿದ್ದು ರಾಜ್ಯದಲ್ಲಿ ಅಭಿವೃದ್ಧಿಗೆ ಮತ್ತಷ್ಟು ವೇಗ ದಕ್ಕಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ತಾಲೂಕಿನ ನಂದಗುಡಿ ಹೋಬಳಿಯ ನಂದಗುಡಿ, ಕೆಂಬಳಿಗಾನಹಳ್ಳಿ, ಚಿಕ್ಕನಹಳ್ಳಿ ಗ್ರಾಮದಲ್ಲಿ ಸುಮಾರು ೧ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಡಿಸಿಎಂ ಆಗಿ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ದೇಶಕ್ಕೆ ಮಾದರಿಯಾಗಿದ್ದರು. ಈಗ ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಪದಗ್ರಹಣ ಸ್ವೀಕರಿಸಿದ್ದು, ರಾಜ್ಯದಲ್ಲಿ ಅಭಿವೃದ್ಧಿಗೆ ಮತ್ತಷ್ಟು ವೇಗ ಬರಲಿದೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆಗಳ ಅಭಿವೃದ್ಧಿ ಜೊತೆಗೆ ಕೈಗಾರಿಕೆಗಳ ಅಭಿವೃದ್ಧಿ ಮಾಡಿ ನಿರುದ್ಯೋಗ ನಿವಾರಣೆಗೆ ಆದ್ಯತೆ ನೀಡಲಿದ್ದಾರೆ. ಕೆಂಬಳಿಗಾನಹಳ್ಳಿ ಗ್ರಾಮಕ್ಕೆ ಗ್ರಾಮಸ್ಥರ ಬೇಡಿಕೆಯಂತೆ ೨೫ ಲಕ್ಷ ಅನುದಾನ ನೀಡಿದ್ದು ಗ್ರಾಮದ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದರು.

ಗ್ರಾಪಂ ಮಾಜಿ ಸದಸ್ಯ ಡಿ.ನಾಗರಾಜ್ ಮಾತನಾಡಿ, ಗ್ರಾಮದಲ್ಲಿ ಅಗತ್ಯ ಪ್ರಮಾಣದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಮರ್ಪಕ ಅನುದಾನವನ್ನು ಶಾಸಕ ಶರತ್ ಬಚ್ಚೇಗೌಡರು ಒದಗಿಸಿದ್ದು ಅಭಿವೃದ್ಧಿ ಕಾರ್ಯಕ್ಕೆ ಪೂರಕವಾಗಿದೆ. ಮತ್ತಷ್ಟು ಅನುದಾನದ ಭರವಸೆ ನೀಡಿದ್ದು ಗ್ರಾಪಂ ವ್ಯಾಪ್ತಿಯಲ್ಲಿ ಕೆಂಬಳಿಗಾನಹಳ್ಳಿ ಗ್ರಾಮ ಮಾದರಿ ಗ್ರಾಮವನ್ನಾಗಿ ನಿರ್ಮಾಣ ಮಾಡಲಿದ್ದೇವೆ ಎಂದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿವಿ.ರಾಜಶೇಖರ್‌ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಟಿ.ಎಸ್.ರಾಜಶೇಖರ್, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಗುರುಬಸಪ್ಪ, ಗ್ರಾಪಂ ಮಾಜಿ ಸದಸ್ಯರಾದ ಭಾಗ್ಯನಾಗರಾಜ್, ಡಿ.ನಾಗರಾಜ್, ಯುವ ಮುಖಂಡರಾದ ಕೆ.ಎನ್.ಮುನಿಸಾಮಪ್ಪ, ಪ್ರವೀಣ್, ವೆಂಕಟೇಶ್, ಮಂದೀಪ್‌ಗೌಡ, ಮಧು ಗುರುಬಸಪ್ಪ, ರವಿರಾಜ್ ಇತರರು ಹಾಜರಿದ್ದರು.

ಫೋಟೋ: 11 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಕೆಂಬಳಿಗಾನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿವಿ.ರಾಜಶೇಖರ್‌ಗೌಡ ಭೂಮಿಪೂಜೆ ನೆರವೇರಿಸಿದರು.