ಸಾರಾಂಶ
- ಮಾಯಕೊಂಡ ಶಾಸಕ ಬಸವಂತಪ್ಪ ಶ್ಲಾಘನೆ । ರಾಮನಗರ ಗಾಂಧಿಭವನದಲ್ಲಿ ಸ್ವಚ್ಛತಾ ನಡಿಗೆ, ಗಾಂಧೀಜಿ-ಶಾಸ್ತ್ರೀಜಿ ಜಯಂತಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೀವನದಲ್ಲಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದಾರೆ. ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ಈ ನಡೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.ಇಲ್ಲಿಯ ರಾಮನಗರದಲ್ಲಿನ ಗಾಂಧಿಭವನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಬುಧವಾರ ಏರ್ಪಡಿಸಲಾದ ಸ್ವಚ್ಛತಾ ನಡಿಗೆ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀಜಿ ಜನ್ಮದಿನ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತವಲ್ಲದೇ ಹೊರ ದೇಶಗಳಲ್ಲಿ ಗಾಂಧೀಜಿಯವರ ಶಾಂತಿ ಮತ್ತು ಅಹಿಂಸಾ ತತ್ವಗಳನ್ನೇ ಅನುಸರಿಸಿದರು. ಜಾಗತಿಕವಾಗಿ ಗಾಂಧಿ ತತ್ವಾದರ್ಶಗಳು ಇಂದಿಗೂ ಪ್ರಸ್ತುತವೆನಿಸಿವೆ. ಇಂತಹ ಮಹಾನ್ ವ್ಯಕ್ತಿಯ ಜಯಂತಿ ಆಚರಿಸುತ್ತಿರುವ ನಾವುಗಳು ಮಾನವೀಯ ಹೃದಯಗಳನ್ನು ಹೊಂದಬೇಕು. ಆಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು. ಗಾಂಧೀಜಿ ಸರಳತೆ, ಸ್ವಚ್ಛತೆ, ಭಾವನಾತ್ಮಕ ಸಂದೇಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸ್ವಚ್ಛತೆ ಎನ್ನುವ ಕೆಲಸ ಮೊದಲು ನಮ್ಮ ಮನೆ, ಸುತ್ತಮುತ್ತಲಿನ ವಾತಾವರಣದಿಂದ ಆರಂಭ ಆಗಬೇಕಿದೆ. ಎಲ್ಲಿಯವರೆಗೆ ಮಾನವ ಧರ್ಮ ಇರುತ್ತದೆಯೋ ಅಲ್ಲಿಯವರೆಗೆ ಗಾಂಧಿ ತತ್ವ- ಆದರ್ಶಗಳು ಇರಲಿವೆ. ಎಲ್ಲ ಧರ್ಮಗಳ ಸಾರವೇ ಶಾಂತಿ ಮತ್ತು ಅಹಿಂಸೆ. ಇದನ್ನು ಎಲ್ಲರೂ ಅರಿತುಕೊಳ್ಳಬೇಕೆಂದು ಹೇಳಿದರು.ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಜಯಂತಿ ಅಂಗವಾಗಿ ಏರ್ಪಡಿಸಲಾದ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಚರಕ ನೂಲುವ ಮೂಲಕ ಸರ್ವಧರ್ಮ ಪ್ರಾರ್ಥನೆ, ಭಜನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಾಂಧಿ ಭವನದಲ್ಲಿ ನಿರಂತರವಾಗಿ ಚಟುವಟಿಕೆ ನಡೆಯಲು ಈಗಾಗಲೇ ವಿವಿಧ 12 ಇಲಾಖೆಗಳಿಂದ ಕಾರ್ಯಕ್ರಮ ಆಯೋಜಿಸಲು ಮತ್ತು ಸರ್ಕಾರದಿಂದ ಆಚರಿಸಲಾಗುವ ಬಹುತೇಕ ಜಯಂತಿಗಳನ್ನು ಇಲ್ಲಿಯೇ ಆಚರಣೆ ಮಾಡಲು ಆದೇಶಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಸ್ವಸಹಾಯ ಸಂಘದಿಂದ ತಯಾರಿಸುವ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಗಾಂಧಿ ಭವನ ನಿರ್ವಹಣೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಶಾಸಕರ ಸಹಯೋಗದೊಂದಿಗೆ ನಿರ್ವಹಣಾ ಸಮಿತಿ ರಚನೆ ಮಾಡಿ ಗಾಂಧಿ ಚಟುವಟಿಕೆಗಳಿಗೆ ಇನ್ನಷ್ಟು ಮಹತ್ವ ಕಲ್ಪಿಸಲಾಗುತ್ತದೆ ಎಂದರು.ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಸದಾ ಶಾಂತಿ ಮತ್ತು ಅಹಿಂಸೆಯನ್ನು ಪಾಲನೆ ಮಾಡುತ್ತಿದ್ದ ಗಾಂಧೀಜಿ ಇತರೇ ಚಳವಳಿಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ವೈಯಕ್ತಿಕ ಲಾಭಕ್ಕಾಗಿ ಅವರು ಎಂದೂ ಚಳವಳಿ ಮಾಡಲಿಲ್ಲ ಎಂದು ತಿಳಿಸಿದರು.
ಇದಕ್ಕೂ ಮುನ್ನ ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗಾಂಧಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಗಾಂಧೀಜಿ ವೇಷಧಾರಿಯೊಂದಿಗೆ ಜಿಲ್ಲಾಡಳಿತ ಅಧಿಕಾರಿಗಳು ಭಾವಚಿತ್ರ ತೆಗೆಸಿಕೊಂಡರು.ಅನಂತರ ಜಿಲ್ಲಾಧಿಕಾರಿಗಳು ಸ್ವಚ್ಛತಾ ನಡಿಗೆಗೆ ಚಾಲನೆ ನೀಡಿದರು. ಸ್ವಚ್ಛತೆಯ ಶ್ರಮದಾನ, ಪ್ರತಿಜ್ಞಾವಿಧಿ ಸ್ವೀಕಾರ ನಡೆಯಿತು. ಗಾಂಧಿ ಭವನದ ಸಭಾಂಗಣದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಜನ್ ಗೀತಗಾಯನ ನಡೆಯಿತು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಪಾಲಿಕೆ ಉಪ ಮಹಾಪೌರರಾದ ಸೋಗಿ ಶಾಂತಕುಮಾರ, ಪಾಲಿಕೆ ಸದಸ್ಯರಾದ ಎ.ನಾಗರಾಜ, ಆಶಾ ಉಮೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ದೂಡಾ ಆಯುಕ್ತ ಹುಲ್ಲುಮನಿ ತಿಮ್ಮಣ್ಣ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಪದವಿಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ, ಆವರಗೆರೆ ರುದ್ರಮುನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿದೇರ್ಶಕ ರವಿಚಂದ್ರ, ನಜ್ಮಾ, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.- - -
ಬಾಕ್ಸ್ * ಶಾಂತಿ-ಅಹಿಂಸೆ ಪಾಲಿಸದಿದ್ದರೆ ದೇಶಕ್ಕೆ ಗಂಡಾಂತರ: ಮೇಯರ್ಪಾಲಿಕೆ ಮಹಾಪೌರರಾದ ಕೆ.ಚಮನ್ ಸಾಬ್ ಮಾತನಾಡಿ, ಹಿಂದು, ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ಶಾಂತಿ ಮತ್ತು ಅಹಿಂಸೆಯನ್ನೇ ಬೋಧಿಸಿವೆ. ಎಲ್ಲ ಧರ್ಮಗಳ ದೇವರುಗಳು ಹೇಳುವ ಸಾರವೇ ಇನ್ನೊಂದು ಧರ್ಮವನ್ನು ದ್ವೇಷಿಸದೇ ಪ್ರೀತಿ- ವಿಶ್ವಾಸದಿಂದ ಕಾಣಬೇಕು ಎನ್ನುವುದಾಗಿದೆ. ಆದರೆ, ಇಂದಿನ ದಿನಗಳಲ್ಲಿ ಯುವಕರು ಧರ್ಮ, ದೇವರ ಕಲ್ಪನೆಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಸಂಘರ್ಷದ ಹಾದಿ ತುಳಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ಶಾಂತಿ ಮತ್ತು ಅಹಿಂಸೆ ಪಾಲಿಸದಿದ್ದರೆ ದೇಶಕ್ಕೆ ಗಂಡಾಂತರ ಎದುರಾಗಲಿದೆ ಎಂದರು.
- - --(ಫೋಟೋ ಬರಲಿವೆ.)