ಸಾರಾಂಶ
ಅನುದಾನ ಬಿಡುಗಡೆ ಆಗಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಿದ್ದಾರೆ. ಹೀಗಾಗಿ, ಶ್ರೇಯಸ್ಸು ಕಾಂಗ್ರೆಸ್ ಕಾರ್ಯಕರ್ತರಿಗೆ ಸಲ್ಲಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ಗಾಂಧಿನಗರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದಾರೆ. ಆದರೆ, ಇದರ ಶ್ರೇಯಸ್ಸನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸದ ವ್ಯಕ್ತಿಗಳು ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಗರ ವಕ್ತಾರ ಎಸ್. ರಾಜೇಶ್ ಆರೋಪಿಸಿದರು.ಗಾಂಧಿನಗರದ ಗರಡಿಗಳು, ಆಸ್ಪತ್ರೆ ಕಟ್ಟಡ, ಗ್ರಂಥಾಲಯ ನಿರ್ಮಾಣಕ್ಕೆ ರಾಜ್ಯ ಸರ್ಕಾರವು 2.80 ಕೋಟಿ ರೂ. ಅನುದಾನ ನೀಡಿದೆ. ಶಾಸಕ ತನ್ವೀರ್ ಸೇಠ್ ಅವರು 1.25 ಕೋಟಿ ಅನುದಾನ ನೀಡಿದ್ದಾರೆ. ಈ ಅನುದಾನ ಬಿಡುಗಡೆ ಆಗಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಿದ್ದಾರೆ. ಹೀಗಾಗಿ, ಶ್ರೇಯಸ್ಸು ಕಾಂಗ್ರೆಸ್ ಕಾರ್ಯಕರ್ತರಿಗೆ ಸಲ್ಲಬೇಕು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗಾಂಧಿನಗರ ಬಡಾವಣೆಯ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಭರವಸೆ ನೀಡಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಾ.ಎಚ್.ಸಿ. ಮಹದೇವಪ್ಪ ಮತ್ತು ಶಾಸಕ ತನ್ವೀರ್ ಸೇಠ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಅವರು ಹೇಳಿದರು.ಕೆಲವು ಅನಾಮಧೇಯ ವ್ಯಕ್ತಿಗಳು ವಿವಿಧ ಸಂಘಟನೆಗಳ ಹೆಸರಿಲ್ಲಿ ಸಭೆ ನಡೆಸುವ ಮೂಲಕ ಈಗಾಗಲೇ ಸಿದ್ಧತೆಗೊಂಡಿರುವ ಕಾಮಗಾರಿಗಳ ಅನುದಾನದ ವಿಷಯದಲ್ಲಿ ಮೂಗು ತೂರಿಸುತ್ತಿದ್ದಾರೆ. ನಾವೇ ಅನುದಾನ ಕೊಡಿಸಿದ್ದು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇದು ಸರಿಯಾದ ನಡವಳಿಕೆಯಲ್ಲ ಎಂದು ಅವರು ಖಂಡಿಸಿದರು.
ಕಾಂಗ್ರೆಸ್ ಮುಖಂಡರಾದ ಉದಯಕುಮಾರ್, ನಾಗರಾಜು, ಮೋಹನ್, ಕುಮಾರ್ ಇದ್ದರು.