ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಪ್ರೌಢಶಾಲಾ ಶಿಕ್ಷಣ ವಿದ್ಯಾರ್ಥಿಗಳ ಜೀವನದ ಬಹುಮುಖ್ಯ ಘಟ್ಟ, ಆದ್ದರಿಂದ ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಗಳ ಬಗ್ಗೆ ಪ್ರಾರಂಭದಿಂದ ಹಿಡಿದು ಅಂತ್ಯದವರೆಗೂ ಕಾಳಜಿ ವಹಿಸಿ, ಅವರಲ್ಲಿ ಬೌದ್ಧಿಕ ಸಾಮರ್ಥ್ಯ ತುಂಬಿ, ಶೈಕ್ಷಣಿಕ ಗುರಿಯನ್ನು ತಲುಪಿಸುವ ನೈತಿಕತೆ ತೋರಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕರೆ ನೀಡಿದ್ದಾರೆ.
ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ನಡೆದ ಪ್ರೌಢ ಶಾಲೆಗಳ ಶಾಲಾ ದಾಖಲಾತಿ ಬಗೆಗಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.ಕೆಲವೊಂದು ಪ್ರೌಢಶಾಲೆಗಳು ತಮ್ಮಲ್ಲಿ ದಾಖಲು ಮಾಡಿಕೊಂಡ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಹಿಂದುಳಿದಿರುವ ಕಾರಣ ಮುಂದಿಟ್ಟುಕೊಂಡು, ಹಾಗೂ ಎಸ್.ಎಸ್.ಎಲ್.ಸಿ.ಯಲ್ಲಿ ಶೇಕಡಾ ನೂರು ಫಲಿತಾಂಶ ದಾಖಲಿಸುವ ದುೂರಾಲೋಚನೆಯಲ್ಲಿ ಅಂತಹ ವಿದ್ಯಾರ್ಥಿಗಳನ್ನು ಹತ್ತನೇ ತರಗತಿಗೆ ಬೇರೆ ಸರ್ಕಾರಿ ಶಾಲೆಗಳಿಗೆ ದಾಖಲಾಗುವಂತೆ ಮಾಡುವುದು ಪತ್ತೆಯಾಗಿದೆ. ಇದು ಒಳ್ಳೆಯ ಸಂಪ್ರದಾಯವಲ್ಲ. ಇಂತಹ ಸಂದರ್ಭಗಳಲ್ಲಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಎಚ್ಚರಿಕೆ ವಹಿಸಬೇಕು ಎಂದರು.ನ್ಯಾಯಯುತ, ನೈತಿಕ ಹಾಗೂ ನೈಜ ಕಾರಣವಿಲ್ಲದೆ ಬೇರೆ ಶಾಲೆಯಿಂದ ಬಂದ ವಿದ್ಯಾರ್ಥಿಗಳನ್ನು 10ನೇ ತರಗತಿಗೆ ಸೇರದಂತೆ ಎಚ್ಚರ ವಹಿಸಬೇಕು, ಇಲ್ಲದಿದ್ದಲ್ಲಿ ಅಂತಹ ಸರ್ಕಾರಿ ಶಾಲೆಗಳ ಫಲಿತಾಂಶ ಕುಸಿದು ಸರ್ಕಾರಿ ಶಾಲೆಗಳಿಗೆ ಕೆಟ್ಟ ಹೆಸರು ಬರುತ್ತದೆ ಎಂದವರು ಎಚ್ಚರಿಸಿದರು.ಬೈಂದೂರು ಹಾಗೂ ಕುಂದಾಪುರ ವ್ಯಾಪ್ತಿಯ ಆಸಕ್ತ ಪ್ರೌಢ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡುವ ಬಗ್ಗೆಯೂ ಚರ್ಚೆ ನಡೆಯಿತು.ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಬೈಂದೂರು, ಕುಂದಾಪುರ, ಹಾಗೂ ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.