೨೭ಕ್ಕೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ: ೬೬೧೭ ಮಂದಿ ನೋಂದಣಿ

| Published : Aug 24 2024, 01:20 AM IST

೨೭ಕ್ಕೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ: ೬೬೧೭ ಮಂದಿ ನೋಂದಣಿ
Share this Article
  • FB
  • TW
  • Linkdin
  • Email

ಸಾರಾಂಶ

ಅಂಧ, ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ, ಬರುವುದರಿಂದ, ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ ಹಾಗೂ ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

ಪಾರದರ್ಶಕ, ವ್ಯವಸ್ಥಿತ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ: ಡೀಸಿ ಡಾ.ಕುಮಾರ । ಪರೀಕ್ಷೆ ಬಗ್ಗೆ ವಿಡಿಯೋ ಸಂವಾದ ಸಭೆ

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಆ.೨೭ ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅಕ್ರಮಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೆಜೆಟೆಡ್ ಪ್ರೊಬೇಷನರಿ ಗೂಪ್-‘ಎ’ ಮತ್ತು ಗ್ರೂಪ್-‘ಬಿ’ ವೃಂದದ ೩೮೪ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬಗ್ಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು.

ಪರೀಕ್ಷೆ ನಡೆಸಲು ಜಿಲ್ಲೆಯಲ್ಲಿ ೧೨ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು ೬೬೧೭ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಪರೀಕ್ಷೆಯು ಬೆಳಗ್ಗೆ ೧೦ ರಿಂದ ೧೨ ಗಂಟೆವರೆಗೆ ಪತ್ರಿಕೆ- ೧ ಮತ್ತು ಮಧ್ಯಾಹ್ನ ೨ ರಿಂದ ಸಂಜೆ ೪ ಗಂಟೆವರೆಗೆ ಪತ್ರಿಕೆ- ೨ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷೆ ಗೌಪ್ಯತೆಯಲ್ಲಿ ಯಾವುದೇ ರಾಜೀಯಿಲ್ಲದಂತೆ ನ್ಯಾಯ ಸಮ್ಮತವಾಗಿ ನಡೆಸಬೇಕು. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ನಿರ್ದೇಶನ ನೀಡಿದರು.

ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲ್ಯೂ- ಟೂತ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಟ್, ಕ್ಯಾಲ್ಕ್ಯೂಲೇಟರ್ ಇತ್ಯಾದಿಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು, ಆರೋಗ್ಯ ಸಿಬ್ಬಂದಿಯನ್ನು ನೇಮಕ ಮಾಡುವುದು. ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.

ಕೊಠಡಿ ಸಂವೀಕ್ಷಕರು ಅಭ್ಯರ್ಥಿಗಳ ಚಲನವಲನಗಳನ್ನು ಆಗಿಂದಾಗ್ಗೆ ಸೂಕ್ಷ್ಮವಾಗಿ ಗಮನಿಸಿ, ಯಾವುದೇ ಅಭ್ಯರ್ಥಿ ಸಂಶಯಾತ್ಮಕವಾಗಿ ವರ್ತಿಸುತ್ತಿದ್ದಲ್ಲಿ ತಕ್ಷಣ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಪರೀಕ್ಷಾ ಕೇಂದ್ರದ ಸ್ಥಳೀಯ ನಿರೀಕ್ಷಣಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.

ಪರೀಕ್ಷಾ ಕೊಠಡಿಗಳಲ್ಲಿನ ಸಿ.ಸಿ ಟಿವಿ ಕ್ಯಾಮೆರಾಗಳು ಪರೀಕ್ಷಾ ಪ್ರಕ್ರಿಯೆಯನ್ನು ಮತ್ತು ಎಲ್ಲಾ ಅಭ್ಯರ್ಥಿಗಳು ಹಾಗೂ ಸಂವೀಕ್ಷಕರ ಚಲನವಲನಗಳನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಸೂಕ್ತ ಕ್ರಮವಹಿಸಲು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಹೇಳಿದರು.

ಅಂಧ, ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ, ಬರುವುದರಿಂದ, ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ ಹಾಗೂ ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ರಾಜಮೂರ್ತಿ ಇತರರಿದ್ದರು.