ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಕಠಿಣ ಕ್ರಮಕೈಗೊಳ್ಳಲು ನಿರ್ಧರಿಸಿದ್ದು, ಸಭೆ-ಸಮಾರಂಭಗಳಲ್ಲಿ ಹೆಚ್ಚಾಗಿ ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ತಡೆಯಲು ನಿಯಮ ಉಲ್ಲಂಘಿಸುವವರಿಗೆ ₹5 ಲಕ್ಷದವರೆಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

 ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ (ಬಿಎಸ್‌ಡಬ್ಲ್ಯುಎಂಎಲ್) ಪ್ಲಾಸ್ಟಿಕ್ ಬಳಕೆ ವಿರುದ್ದ ಕಠಿಣ ಕ್ರಮಕೈಗೊಳ್ಳಲು ನಿರ್ಧರಿಸಿದ್ದು, ಸಭೆ-ಸಮಾರಂಭಗಳಲ್ಲಿ ಹೆಚ್ಚಾಗಿ ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ತಡೆಯಲು ನಿಯಮ ಉಲ್ಲಂಘಿಸುವವರಿಗೆ ₹5 ಲಕ್ಷದವರೆಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಪ್ಲಾಸ್ಟಿಕ್ ಬಳಕೆ ಮಿತಿಮೀರುತ್ತಿದೆ

ನಗರದಲ್ಲಿ ನಡೆಯುವ ವಿವಾಹ ಮಹೋತ್ಸವಗಳು, ದೊಡ್ಡ ಮಟ್ಟದ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಿತಿಮೀರುತ್ತಿದೆ. ಇದನ್ನು ತಡೆಯಲು ಸ್ವಚ್ಛ ಬೆಂಗಳೂರು ಅಭಿಯಾನದಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಕಲ್ಯಾಣ ಮಂಟಪಗಳು, ಕನ್ವೆನ್ಷನ್ ಸೆಂಟರ್‌ಗಳು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಮಾರ್ಷಲ್‌ಗಳು ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. ದಾಳಿಯ ವೇಳೆ ಪ್ಲಾಸ್ಟಿಕ್ ಮತ್ತು ಥರ್ಮಕೋಲ್ ತಟ್ಟೆಗಳು, ಲೋಟಗಳು, ಚಮಚಗಳು, ಫ್ಲೆಕ್ಸ್‌ಗಳು ಮತ್ತು ಪ್ಲಾಸ್ಟಿಕ್ ಶೀಟ್‌ಗಳು ಇತ್ಯಾದಿ ನಿಷೇಧಿತ ವಸ್ತುಗಳು ಕಂಡು ಬಂದಲ್ಲಿ ಕ್ರಮಕೈಗೊಳ್ಳಲಿದ್ದಾರೆ. ನಿಷೇಧಿತ ಪ್ಲಾಸ್ಟಿಕ್‌ ಬಳಸಿದರೆ, ಆರಂಭದಲ್ಲಿ ₹3,500 ದಂಡ ಮತ್ತು ಪದೇ ಪದೇ ನಿಯಮ ಉಲ್ಲಂಘಿಸಿದರೆ ಗರಿಷ್ಠ ₹5 ಲಕ್ಷದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕಠಿಣ ನಿಯಮ

ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದ್ದೇವೆ. ಸಾರ್ವಜನಿಕರು ಸಹಕರಿಸಬೇಕು. ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕೇವಲ ಸರ್ಕಾರದಿಂದ ಮಾತ್ರ ಸಾಧ್ಯವಿಲ್ಲ. ನಾಗರಿಕರು ತಮ್ಮ ಮನೆಯ ಶುಭ ಕಾರ್ಯಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಬಾಳೆ ಎಲೆ, ಅಡಿಕೆ ತಟ್ಟೆ ಹಾಗೂ ಸ್ಟೀಲ್ ಲೋಟಗಳನ್ನು ಬಳಸಿ ಇತರರಿಗೆ ಮಾದರಿಯಾಗಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.