ಯಾವುದೇ ಸಭೆಗಳು ಆತ್ಮ ವಿಮರ್ಶೆಗಳ ಸಭೆಯಾಗಬೇಕೆ ಹೊರತು ಕಾಟಾಚಾರಕ್ಕೆ ನಡೆಯುವಂತಾಗಬಾರದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕುಶಾಲನಗರ : ಯಾವುದೇ ಸಭೆಗಳು ಆತ್ಮ ವಿಮರ್ಶೆಗಳ ಸಭೆಯಾಗಬೇಕೆ ಹೊರತು ಕಾಟಾಚಾರಕ್ಕೆ ನಡೆಯುವಂತಾಗಬಾರದು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕುಶಾಲನಗರದಲ್ಲಿ ನಡೆದ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದಿನ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಹೇಳಿದರು.

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಕರ್ನಾಟಕ ಜನಜಾಗೃತಿ ವೇದಿಕೆ ಕಳೆದ ಹಲವು ವರ್ಷಗಳಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ವೇದಿಕೆಯ ಕಾರ್ಯಕ್ರಮಗಳು ವಿಶ್ವ ಮಾನ್ಯತೆ ಹೊಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು ನಶಮುಕ್ತ ಭಾರತ ನಿರ್ಮಾಣ ಎಲ್ಲರ ಗುರಿಯಾಗಬೇಕಾಗಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ವೇದಿಕೆ ಸಭೆಯಲ್ಲಿ ತಂಬಾಕು ವಿರೋಧಿ ದಿನಾಚರಣೆಯ ಕಾರ್ಯಕ್ರಮ ಬಗ್ಗೆ ಮಾದಕ ವಸ್ತು ವಿರೋಧಿ ದಿನಾಚರಣೆ ಬಗ್ಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಅನುಷ್ಠಾನ ಗೊಳಿಸುವ ಬಗ್ಗೆ ಮತ್ತು ಮಧ್ಯವರ್ಜನ ಶಿಬಿರಗಳ ಅನುಷ್ಠಾನದ ಬಗ್ಗೆ ಸುದೀರ್ಘ ಚರ್ಚೆಗಳ ನಡೆದವು. ಅಕ್ಟೋಬರ್ ತಿಂಗಳಲ್ಲಿ ಗಾಂಧಿ ಜಯಂತಿ ಅಂಗವಾಗಿ ಕಾರ್ಯಕ್ರಮ ನಡೆಸುವ ಬಗ್ಗೆ ನವ ಜೀವನೋತ್ಸವ ಕಾರ್ಯಕ್ರಮಗಳ ಅನುಷ್ಠಾನ, ಪೋಷಕರ ತರಬೇತಿ ಕಾರ್ಯಕ್ರಮ ಅನುಷ್ಠಾನ ಮತ್ತು ಸೇವಾ ಧರ್ಮ ಕಾರ್ಯಕ್ರಮಗಳನ್ನು ನಡೆಸುವ ವಿಚಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಜನಜಾಗೃತಿ ವೇದಿಕೆ ಕೊಡಗು ಜಿಲ್ಲಾ ಅಧ್ಯಕ್ಷರಾದ ಎ ಟಿ ರಂಗಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವೇದಿಕೆಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಲಾಯಿತು.

ನಿಕಟ ಪೂರ್ವ ಅಧ್ಯಕ್ಷರಾದ ಪಿ ಅಭಿಮನ್ಯು ಕುಮಾರ್, ಬಾನಂಗಡ ಅರುಣ್ ಕುಮಾರ್ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರು ಹಾಗೂ ವೇದಿಕೆಯ ಕಾರ್ಯದರ್ಶಿಗಳಾದ ವಿಠಲ ಸಾಲಿಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಕರಾವಳಿ ಪ್ರದೇಶದ ಕಚೇರಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ನಿರೂಪಿಸಿದರು.

2131 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಉಪಾಧ್ಯಕ್ಷ ವಿ ಡಿ ಪುಂಡರಿಕಾಕ್ಷ, ಖಜಾಂಚಿ ಶಾಂತಮಲ್ಲಪ್ಪ, ತಾಲೂಕು ಯೋಜನಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.