ಸಾರಾಂಶ
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾ ಗಾರ ನಡೆಯಲಿದೆ.
ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾಗಾರ ನಡೆಯಲಿದೆ ಎಂದು ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ರವಿ ಗುಂಜೀಕರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೌಕರರನ್ನ ಉದ್ದೇಶಿಸಿ ಆಶಯ ನುಡಿಗಳನ್ನಾಡಲಿದ್ದಾರೆ. ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸಚಿವ ಡಾ. ಜಿ.ಪರಮೇಶ್ವರ, ಡಾ.ಎಚ್.ಕೆ. ಪಾಟೀಲ್, ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ್, ದಿನೇಶ ಗುಂಡುರಾವ್ ಸೇರಿದಂತೆ ಎಲ್ಲಾ ಇಲಾಖೆಗಳ ಸಚಿವರುಗಳು ವಿಶೇಷ ಆಹ್ವಾನಿತರಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ ಗೋಯಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ ಅವರು ಪ್ರಜಾ ಸ್ನೇಹಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ನೌಕರರ ಸೇವೆ ಹಾಗೂ ಕಾರ್ಯದಕ್ಷತೆ ಉಪನ್ಯಾಸ ನೀಡಲಿದ್ದಾರೆ.ಹೃದ್ರೋಗ ತಜ್ಞರಾದ ಡಾ. ಸಿ.ಎನ್. ಮಂಜುನಾಥ ನೌಕರರ ಆರೋಗ್ಯ ಹಾಗೂ ಒತ್ತಡ ನಿರ್ವಹಣೆ ಕುರಿತ ಉಪನ್ಯಾಸ ನೀಡಲಿದ್ದಾರೆ. ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋಗದ ವರದಿ ಅನುಷ್ಠಾನ ಸೇರಿ ಹಲವು ಬೇಡಿಕೆಗಳಗಳ ಮನವಿಯನ್ನು ಮಾಡಲಾಗುವುದು. ರಾಜ್ಯದ ಸಮಸ್ತ ಸರಕಾರಿ, ವಿವಿಧ ವೃಂದಗಳ ಮತ್ತು ನಿವೃತ್ತ ನೌಕರ ಬಾಂಧವರು ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದ್ದಾರೆ.