ಕನ್ನಡಪ್ರಭ ವಾರ್ತೆ ಮೈಸೂರು

ವಿದ್ಯಾರ್ಥಿಗಳು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಗಳ ಶ್ರೀಮಂತಿಕೆ ಉಳಿಸಿಕೊಳ್ಳುವಲ್ಲಿ ಹೆಚ್ಚಿನ ಪಾತ್ರ ವಹಿಸಬೇಕು ಎಂದು ಜಾನಪದ ಕಲಾವಿದ ಕೃಷ್ಣಮೂರ್ತಿ ತಲಕಾಡು ಕರೆ ನೀಡಿದರು.ನಗರದ ಡಿ. ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ಕಲಾಭವನದಲ್ಲಿ ಮಂಗಳವಾರ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರತಿಭಾಶೋಧ- 2024 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.ಇದರೊಂದಿಗೆ ತಮ್ಮಲ್ಲಿನ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರಗಳು ಮತ್ತು ಇತರೆ ಕೌಶಲ್ಯಗಳು ತಾನಾಗಿಯೇ ಉನ್ನತ ಮಟ್ಟಕ್ಕೇರುತ್ತವೆ. ಇದರಿಂದ ವ್ಯಕ್ತಿತ್ವದ ಪರಿಪೂರ್ಣತೆಗೆ ಪೂರಕ ವಾತಾವರಣ ನಿರ್ಮಾಣವಾದಂತಾಗುತ್ತದೆ ಎಂದು ಅವರು ತಿಳಿಸಿದರು.ಕಾಲೇಜಿನ ಪ್ರಾಂಶುಪಾಲ ಬಸವರಾಜು ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಡಾ.ಎಸ್. ಇಂದಿರಮ್ಮ, ಐಕ್ಯೂಎಸಿ ಸಂಚಾಲಕಿ ಎಂ.ಎಲ್. ನಳಿನಾ, ಸಹ ಸಂಚಾಲಕ ಬಿ.ವಿ. ವೆಂಕಟೇಶ ಮೊದಲಾದವರು ಇದ್ದರು.