ಕನ್ನಡಪ್ರಭ ವಾರ್ತೆ ಕುಶಾಲನಗರ

ಮುಂಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಸಂಬಂಧ ಪ್ರತಿ ಕಾರ್ಯಕರ್ತರು ಸನ್ನದ್ಧರಾಗುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು.

ಕುಶಾಲನಗರ ಎಸ್ ಎಲ್ ಎನ್ ಸ್ಕ್ವಯರ್ ಸಭಾಂಗಣದಲ್ಲಿ ನಡೆದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರಮುಖರು ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ರಾಜ್ಯ ಸರ್ಕಾರದ ಸಮಗ್ರ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಒದಗಿಸಬೇಕು, ಮನರೇಗಾ ಹೋರಾಟ ಅತ್ಯಂತ ಪರಿಣಾಮಕಾರಿಯಾಗಿ ನಡೆಯಬೇಕಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಸಾಮಾನ್ಯ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪಣ ತೊಡ ಬೇಕು ಎಂದು ಕರೆ ನೀಡಿದರು.

ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ಕಾರ್ಯಕರ್ತರ ಮೂಲಕ ತಾನು ಕ್ಷೇತ್ರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸದವಕಾಶ ಕಲ್ಪಿಸಿದ್ದು, ತಮ್ಮೆಲ್ಲರ ಬೆಂಬಲ ನಿರಂತರ ಅಗತ್ಯವಿದೆ. ತಾನು ಕಾಂಗ್ರೆಸ್ಸಿಗೆ ನಿಷ್ಠನಾಗಿದ್ದು, ಕ್ಷೇತ್ರದ ಅಭಿವೃದ್ಧಿಯತ್ತ ತನ್ನ ಚಿತ್ತ ಎಂದ ಅವರು ಹೇಳಿದರು.ಮಡಿಕೇರಿ ಕ್ಷೇತ್ರದ ಹಲವು ಯೋಜನೆಗಳನ್ನು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸುವ ಚಿಂತನೆ ಹೊಂದಿದ್ದು, ಸರ್ಕಾರ ಎಲ್ಲ ರೀತಿಯಲ್ಲೂ ಸಹಕಾರ ನೀಡುತ್ತಿದೆ ಎಂದು ಮಾಹಿತಿ ನೀಡಿದರು. ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ಲಕ್ಷ್ಮಣ್ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಕಾರ್ಯಕರ್ತರನ್ನು ಕಡೆಗಣಿಸುವಂತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.ಮಡಿಕೇರಿ ಕ್ಷೇತ್ರದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಟಿ.ಜಿ. ಸತೀಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಎಚ್.ಎ. ಹಂಸ ಅವರು ತಮ್ಮ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪರ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಟಿ.ಪಿ. ರಮೇಶ್, ಚಂದ್ರಮೌಳಿ, ಕೆ.ಎ. ಯಾಕೋಬ್, ಮಂಜುನಾಥ ಗುಂಡುರಾವ್, ಕೆ.ಪಿ. ಚಂದ್ರಕಲಾ, ಕೆ.ಕೆ. ಮಂಜುನಾಥ್ ಕುಮಾರ್, ಲೋಕೇಶ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್, ನಾಪಂಡ ಮುತ್ತಪ್ಪ, ಇಂಟಕ್ ಜಿಲ್ಲಾ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಜಿಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳು, ಹಿಂದುಳಿದ ಅಲ್ಪಸಂಖ್ಯಾತ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.