ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಜನಸಾಮಾನ್ಯರ ಕುಂದುಕೊರತೆ ಸ್ವೀಕರಿಸಿ ನಿಗದಿತ ಅವಧಿಯೊಳಗೆ ಬಗೆಹರಿಸಬೇಕು. ಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಪ್ರಜಾಸೇವಾ ಆಂದೋಲನಾ ಜಾರಿ ಮಾಡಿರುವುದು ಸಾರ್ವಜನಿಕರಿಗೆ ಅನುಕೂಲವಾಗುವ ಜೊತೆಗೆ ವೈಯಕ್ತಿಕವಾಗಿಯೂ ಖುಷಿ ತಂದಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕು ಕಚೇರಿಯಲ್ಲಿ ಜನ ಸಾಮಾನ್ಯರನ್ನು ಅನಗತ್ಯವಾಗಿ ಅಲೆದಾಡಿಸದೇ ನಿಗದಿತ ಸಮಯದಲ್ಲಿ ಕೆಲಸ ಮಾಡಿಕೊಡಬೇಕೆಂದು ವಿಧಾನ ಪರಿಷತ್ ಸದಸ್ಯ ದಡದಪುರ ಬಿ.ಎಸ್. ಶಿವಣ್ಣ ತಿಳಿಸಿದರು.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ತಾಲೂಕು ಆಡಳಿತದಿಂದ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿ, ಸರ್ಕಾರಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಸರ್ಕಾರದ ಪ್ರಜಾ ಸೇವಾ ಆಂದೋಲನ ಸಹಕಾರಿಯಾಗಿದೆ ಎಂದರು.
ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಜನಸಾಮಾನ್ಯರ ಕುಂದುಕೊರತೆ ಸ್ವೀಕರಿಸಿ ನಿಗದಿತ ಅವಧಿಯೊಳಗೆ ಬಗೆಹರಿಸಬೇಕು. ಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಆಂದೋಲನಾ ಜಾರಿ ಮಾಡಿರುವುದು ಸಾರ್ವಜನಿಕರಿಗೆ ಅನುಕೂಲವಾಗುವ ಜೊತೆಗೆ ವೈಯಕ್ತಿಕವಾಗಿಯೂ ಖುಷಿ ತಂದಿದೆ ಎಂದರು.ಉನ್ನತ ವ್ಯಾಸಂಗ ಮಾಡುವ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್ ಟ್ಯಾಪ್ ನೀಡಬೇಕು. ಈಗಾಗಲೇ ನನ್ನ ಸ್ವಂತ ಹಣದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ನೀಡುತ್ತಿದ್ದು, ಸರ್ಕಾರದಿಂದ ಸಾಧ್ಯವಾಗದಿದ್ದರೆ ಶಾಸಕರು ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ನೀಡುವ ಕಾರ್ಯ ಮಾಡಬೇಕೆಂದರು.
ತಹಸೀಲ್ದಾರ್ ಎಸ್.ವಿ.ಲೋಕೇಶ್ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ನೀಡುವ ಅಹವಾಲುಗಳನ್ನು ನಿಯಮಿತವಾಗಿ ವಿಲೇವಾರಿ ಮಾಡುವುದರ ಜೊತೆಗೆ ಕೆಲ ದೂರನ್ನು ಸ್ಥಳದಲ್ಲೇ ಪರಿಹರಿಸಲಾಗುವುದು. ಅರ್ಜಿ ಪರಿಶೀಲಿಸಿ ಕ್ರಮ ವಹಿಸುತ್ತೇವೆ. ಮುಂದಿನ ದಿನಗಳಲ್ಲಿ ಹೋಬಳಿವಾರು ಸಹ ಆಯೋಜನೆ ಮಾಡಲಾಗುವುದು ಎಂದರು.ಕಾರ್ಯಕ್ರಮದಲ್ಲಿ ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಟಿ.ಪುಟ್ಟಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಗ್ರೇಡ್-2 ತಹಸೀಲ್ದಾರ್ ಭಾಗ್ಯಲಕ್ಷ್ಮಿ, ಸಿಪಿಐ ಎಸ್.ಜಯಾನಂದ್ ಇದ್ದರು.
ಜನರಿಂದ ಅಹವಾಲು ಸ್ವೀಕರಿಸಲು ಎಲ್ಲ ಇಲಾಖಾ ಅಧಿಕಾರಿಗಳು ಸಿಬ್ಬಂದಿ ದಂಡು ಕಂಪ್ಯೂಟರ್ ಲ್ಯಾಪ್ ಟ್ಯಾಪ್ ಗಳ ಸಮೇತ ಹಾಜರಾಗಿದ್ದರೂ ಅರ್ಜಿ ಸಲ್ಲಿಸಬೇಕಾದ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಸಭಾಂಗಣದಲ್ಲಿ ಅಧಿಕಾರಿಗಳು, ಸಿಬ್ಬಂದಿ ಬಿಟ್ಟರೆ ಸಾರ್ವಜನಿಕರಿಲ್ಲದೇ ಖಾಲಿಯಾಗಿತ್ತು.