ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಇದರಿಂದ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ಶಾಸಕ ಬಿ.ಎನ್ ರವಿಕುಮಾರ್ ಹೇಳಿದರು.

ತಾಲೂಕಿನ ಆನೂರು ಗ್ರಾಮ ಪಂಚಾಯಿತಿಯ ಎ.ಹುಣಸೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 2026ನೇ ಸಾಲಿನ ಐದು ವರ್ಷದ ಕೆಳಗಿನ ಮಕ್ಕಳಿಗೆ ಉಚಿತ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಆರೋಗ್ಯವಂತರಾಗಿ ಬದುಕಲು ಪೋಲಿಯೋ ಲಸಿಕೆ ಜೀವಾಮೃತ. ಪೋಲಿಯೋ ಮುಕ್ತ ದೇಶವನ್ನಾಗಿ ಮಾಡಲು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಎಂದರು.

ಪೋಲಿಯೋ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಆತಂಕ ಬೇಡ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತವನ್ನಾಗಿ ಮುಂದುವರಿಸಲು ಎಲ್ಲರೂ ಸಹಕರಿಸಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದೇ ಪೋಲಿಯೋ ಲಸಿಕೆ ಹಾಕಿಸುವಲ್ಲಿ ವಿವಿಧ ಇಲಾಖೆಗಳ ಸಮನ್ವಯತೆಯೊಂದಿಗೆ ಈ ಬಾರಿ ಜೂ.28 ರಿಂದ ಜುಲೈ 1ರ ವರಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೆಚ್ಚಿನ ಕಾಳಜಿ ವಹಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಲು ಉತ್ತೇಜನ ನೀಡಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗಗನ ಸಿಂಧು, ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಶಿಶು ಅಭಿವೃದ್ಧಿ ಇಲಾಖೆಯ ವಿದ್ಯಾ ಎ ವಸ್ತ್ರದ್, ಮುಖಂಡರಾದ ಬಂಕ್ ಮುನಿಯಪ್ಪ, ತಾದೂರು ರಘು, ತಾಲೂಕು ವೈದ್ಯಾಧಿಕಾರಿ ನರ್ಮದಾ, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್ ಆರ್ ವೆಂಕಟೇಶ್, ಮುಖಂಡರಾದ ಮೇಲೂರು ಮಂಜುನಾಥ್, ಹುಣಸೇನಹಳ್ಳಿ ಆನಂದ್ ಸೇರಿ ಸ್ಥಳೀಯ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.