ಕನ್ನಡಪ್ರಭ ವಾರ್ತೆ ಅಥಣಿ

ವಿದ್ಯಾರ್ಥಿಗಳ ಸೂಕ್ತ ಪ್ರತಿಭೆ ಗುರುತಿಸಿ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದಾಗ ಅವರು ಸಾಧಕರಾಗಿ ಬೆಳೆಯಲು ಸಾಧ್ಯ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಹೇಳಿದರು.

ಇಲ್ಲಿನ ಕೆಎಲ್ಇ ಸಂಸ್ಥೆಯ ಎಸ್ಎಸ್ಎಂಎಸ್ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಆಫ್ ಅಥಣಿ ಹಮ್ಮಿಕೊಂಡಿದ್ದ ಸಾಧಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ಲಯನ್ಸ್ ಕ್ಲಬ್ ಅನೇಕ ಸಾಮಾಜಿಕ ಸೇವೆ ಮಾಡುತ್ತ ಜನರ ಪ್ರಶಂಸೆಗೆ ಪಾತ್ರವಾಗಿದೆ. ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಿ ಪ್ರೋತ್ಸಾಹಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರಮುಖ ಹಂತಗಳು. ಶಿಕ್ಷಣ ಪ್ರತಿಯೊಬ್ಬರಿಗೂ ಬೇಕು, ಆದರೆ ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದೊಂದೇ ಮುಖ್ಯವಾಗುತ್ತಿದೆ. ಹೆಚ್ಚು ಅಂಕ ಬಂದ ಅನೇಕ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಫೇಲಾಗಿರುವುದನ್ನು ಕಂಡಿದ್ದೇವೆ. ಎಷ್ಟು ಮಕ್ಕಳು ಹೆಚ್ಚು ಅಂಕಗಳು ಬರಲಿಲ್ಲ ಎಂದು ಮಾನಸಿಕವಾಗಿ ಕುಗ್ಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ದರಿಂದ ಹೆಚ್ಚು ಅಂಕ ಗಳಿಸುವುದು ಒಂದೇ ಮಾನದಂಡವಲ್ಲ. ವಿದ್ಯಾರ್ಥಿಗಳ ಜೀವನದಲ್ಲಿ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಜ್ಞಾನವನ್ನು ಸಂಗ್ರಹಿಸುವುದರ ಜೊತೆಗೆ ಜೀವನದಲ್ಲಿ ಸಂಸ್ಕಾರ, ಸಂಸ್ಕೃತಿ, ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಕಿವಿಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ನ ಅಧ್ಯಕ್ಷ ರಮೇಶ ಬುಲಬುಲೆ ಮಾತನಾಡಿ, ಈ ಬಾರಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಆಗಿ ಅಥಣಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆ. ಈ ಎಲ್ಲಾ ಸಾಧಕ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶದ ಮತ್ತು ನಾಡಿನ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಇನ್ನಿತರರಿಗೆ ಮಾದರಿ ಯಾಗಬೇಕು ಎಂದು ಸಾಧಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಟಗೇರಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾರ್ಥನಾ ಬಿರಾದಾರ ಪಾಟೀಲ ಹಾಗೂ ಐಗಳಿ ಆದರ್ಶ ಪ್ರೌಢಶಾಲೆಯ ವಿದ್ಯಾರ್ಥಿ ದಶರಥ ಶಿವಾಜಿ ಬೋಸಲೆ ಪಾಲಕರನ್ನು ಸೇರಿದಂತೆ ನೂರಾರು ಸಾಧಕ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.ಈ ವೇಳೆ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಆನಂದ ಟೋಣಪಿ, ಕಾರ್ಯದರ್ಶಿ ವಿನೋದ್ ಕನಮಡಿ, ಖಜಾಂಚಿ ಅಶೋಕ ಹೊಸೂರ, ಕಿರಣ ಸಿರಗುಪ್ಪಿ, ಬಸವರಾಜ ಬಾವಣ್ಣವರ, ಬಾಹುಸಾಹೇಬ ನಾಯಿಕ, ವೈಭವ ಪೋತದಾರ, ಡಾ.ರವಿ ಗಾವಡೆ, ಇರಾವತಿ ಕವಲಾಪುರೆ, ಭಾರತಿ ಸಂಕ್ರಟ್ಟಿ, ಮೋಹನ ಕಾಂಬಳೆ, ಮಂಜುನಾಥ ಬಡಿಗೇರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿನೋದ ಕನಮಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಣ ಶಿರಗುಪ್ಪಿ, ಭಾರತಿ ಕೋರೆ ರೂಪಿಸಿದರು. ಅಮಿತ ಮಹಾಜನ ವಂದಿಸಿದರು.