ಕನ್ನಡಪ್ರಭ ವಾರ್ತೆ ನವದೆಹಲಿ

15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2186.20 ಕೋಟಿ ಅನುದಾನ ಬಿಡುಗಡೆ ಮಾಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ಕೇಂದ್ರ ಹಣಕಾಸು ಹಾಗೂ ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರ ಎಲ್ಲ ನಿಗದಿತ ಷರತ್ತುಗಳನ್ನು ಪಾಲಿಸಿದ್ದರೂ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-2026ನೇ ಆರ್ಥಿಕ ವರ್ಷಕ್ಕೆ ಗ್ರಾ.ಪಂ.ಗಳಿಗೆ ಹಂಚಿಕೆಯಾಗಿದ್ದ ₹2186.20 ಕೋಟಿ ಬಿಡುಗಡೆಯಾಗಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಅವರ ಗಮನಕ್ಕೆ ತಂದರು. ತಂತ್ರಾಂಶದ ತೊಡಕನ್ನೇ ಕಾರಣವಾಗಿಟ್ಟುಕೊಂಡು ಅನುದಾನ ತಡೆಹಿಡಿಯಲಾಗಿದೆ ಎಂಬ ಅಂಶವನ್ನು ತಿಳಿಸಿದ್ದಾರೆ.ಎಲ್‌ ನಿನೋ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮೀಣಾಭಿವೃದ್ಧಿಗೆ ತೊಡಕಾಗಿದೆ. ಅಲ್ಲದೆ, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಸಲ್ಲಿಸಿದ್ದಾರೆ.

2021-22 ರಿಂದ 2025-26ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಆಯೋಗದಿಂದ ಹಂಚಿಕೆಯಾಗಿದ್ದ ಒಟ್ಟು ಅನುದಾನದ ಪೈಕಿ 2025-2026ರ ಆರ್ಥಿಕ ವರ್ಷದ ಅನುದಾನ ಬಿಡುಗಡೆ ಮಾಡಲು ತಾಂತ್ರಿಕ ಕಾರಣ ನೀಡಿ ಕೇಂದ್ರ ನಿರಾಕರಿಸುತ್ತಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಅಂಶವನ್ನೂ ಈಶ್ವರ ಖಂಡ್ರೆ ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತಂದಿದ್ದಾರೆ.

ರಾಜ್ಯ ಸರ್ಕಾರ ಅಗತ್ಯ ಪ್ರಮಾಣಪತ್ರಗಳನ್ನು ಒದಗಿಸಿರುವುದಲ್ಲದೆ, ಕೇಂದ್ರ ಪಂಚಾಯತ್ ಸಚಿವಾಲಯ ಕೇಳಿದ್ದ ಎಲ್ಲ ಪ್ರಶ್ನೆಗಳಿಗೂ ಪೂರಕವಾಗಿ ಉತ್ತರಿಸಿದೆ. ಆದರೂ ಹಣ ಬಿಡುಗಡೆ ಆಗದಿರುವ ಹಿನ್ನೆಲೆಯಲ್ಲಿ ರಾಜ್ಯವನ್ನು ಮೇಲ್ಮನೆಯಲ್ಲಿ ಪ್ರತಿನಿಧಿಸುವ ತಾವು ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ದೃಷ್ಟಿಯಿಂದ ₹2186.20 ಕೋಟಿ ಹಣ ಬಿಡುಗಡೆ ಮಾಡಿಸಬೇಕು ಎಂದು ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.