ಕನ್ನಡಪ್ರಭ ವಾರ್ತೆ ಬೆಳಗಾವಿ
ಎಸ್ಐಆರ್ ಪ್ರಕ್ರಿಯೆಯನ್ನು ಪ್ರಜಾತಾಂತ್ರಿಕಗೊಳಿಸುವ ನಿಟ್ಟಿನಲ್ಲಿ ನಾಗರಿಕ ಸಮಾಜ ಮುಂದಿಟ್ಟಿರುವ ನಾಲ್ಕು ಪ್ರಮುಖ ಹಕ್ಕೊತ್ತಾಯಗಳನ್ನು ಪರಿಗಣಿಸಿ ಸ್ಪಷ್ಟ ಉತ್ತರ ನೀಡಬೇಕೆಂದು ಆಗ್ರಹಿಸಿ, ಎಸ್ಐಆರ್ ವಿರೋಧಿ ಜನಪರ ಸಂಘಟನೆಗಳ ಒಕ್ಕೂಟವು ಮಂಗಳವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿತು.ಜೂ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರಸ್ತಾಪಿಸಲಾದ ವಿಚಾರಗಳು, ಕೇಳಲಾದ ಪ್ರಶ್ನೆಗಳು, ರಾಜ್ಯದ ಸಾಹಿತಿಗಳು, ಚಿಂತಕರು, ಕಲಾವಿದರು ಹಾಗೂ ರಂಗಕರ್ಮಿಗಳು ಬರೆದ ಪತ್ರ ಮತ್ತು ರಾಜ್ಯ ಸರ್ಕಾರದ ಪತ್ರಕ್ಕೆ ರಾಜ್ಯ ಚುನಾವಣಾ ಆಯೋಗ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡದೆ ಇರುವುದು ಪ್ರಜಾತಾಂತ್ರಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಂಸ್ಥೆಗಳು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುವುದು ಮೂಲಭೂತ ಕರ್ತವ್ಯವಾಗಿದ್ದು, ಆಯೋಗವು ಈ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವುದು ಸಂವಿಧಾನ ವಿರೋಧಿ ನಡೆ ಎಂದು ಸಂಘಟನೆಗಳು ಆರೋಪಿಸಿವೆ.
ಈ ಸಂದರ್ಭದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಡಾ.ಯಲ್ಲಪ್ಪ ಹಿಮ್ಮಡಿ, ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಐನಾ ಶೇಖ್, ಸಿಐಟಿಯು ಸಂಘಟನೆಯ ಮಂದಾ ನೇವಗಿ, ಎದ್ದೇಳು ಕರ್ನಾಟಕದ ಯಾಸೀನ್ ಖಾನ್ ಮಕಾಂದಾರ್, ಎಸ್ಡಿಪಿಐ ಸಂಘಟನೆಯ ಮೌಜ್ಜಮ್ ಮುಲ್ತಾನಿ, ಮಜ್ದೂರ್ ನವನಿರ್ಮಾಣ ಸಂಘದ ಕವಿತಾ ಜಾರಕಿಹೊಳಿ, ಮಾನವ ಹಕ್ಕುಗಳ ಹೋರಾಟಗಾರರಾದ ವರ್ಷಾ ಪದ್ಮಣ್ಣವರ, ಶುಭಾಂಗಿ ನಿಕ್ಕಮ್, ರಜಿಯಾ ಬೇಗಮ್ ಶೇಖ್, ಸಾಮಾಜಿಕ ಹೋರಾಟಗಾರರಾದ ಸುನಿತಾ ಸುಬೇದಾರ, ತಾನಾಜಿ ಸಾವಂತ ಸೇರಿ ವಿವಿಧ ಸಂಘಟನೆಗಳ ಪ್ರಮುಖರು ಹಾಜರಿದ್ದರು.----------ಕೋಟ್
ಚುನಾವಣಾ ಆಯೋಗ ಸರ್ವಾಧಿಕಾರಿ ಧೋರಣೆ ಅನುಸರಿಸದೆ ಲಾಜಿಕಲ್ ಡಿಸ್ಕ್ರಿಪೆನ್ಸಿ ಸಾಪ್ಟ್ವೇರ್ ಬಳಕೆಯನ್ನು ಕೈಬಿಡಬೇಕು. ಅಲ್ಲದೆ, ಜನರಿಗೆ ಮೇಲ್ಮನವಿ ಸಲ್ಲಿಸಲು ಸಮರ್ಪಕ ಸಮಯಾವಕಾಶ ನೀಡಬೇಕು. ಇಲ್ಲವಾದಲ್ಲಿ ಈ ವಿಚಾರ ರಾಜ್ಯಾದ್ಯಂತ ಬೃಹತ್ ಜನಾಂದೋಲನವಾಗಿ ರೂಪುಗೊಳ್ಳಲಿದೆ.ಡಾ.ಯಲ್ಲಪ್ಪ ಹಿಮ್ಮಡಿ, ಎಸ್ಐಆರ್ ವಿರೋಧಿ ಜನಪರ ಸಂಘಟನೆಗಳ ಒಕ್ಕೂಟ