ಸಾರಾಂಶ
ಹೊಳಲ್ಕೆರೆ: ಶಿಕ್ಷಣದ ಜೊತೆಗೆ ಕೃಷಿಗೂ ಹೆಚ್ಚಿನ ಮಹತ್ವ ಕೊಡಬೇಕಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಹೊಳಲ್ಕೆರೆ: ಶಿಕ್ಷಣದ ಜೊತೆಗೆ ಕೃಷಿಗೂ ಹೆಚ್ಚಿನ ಮಹತ್ವ ಕೊಡಬೇಕಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮತ್ತು ಅಮೃತ್ ಆರ್ಗ್ಯಾನಿಕ್ ಫರ್ಟಿಲೈಜರ್ ಮಲ್ಲಾಡಿಹಳ್ಳಿ ಇವರ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.ಭಾರತ ಕೃಷಿ ಪ್ರದಾನ ದೇಶ. ರೈತರು ಬೆಳೆಯುವ ಬೆಳೆಗಳಿಗೆ ಮಾರುಕಟ್ಟೆಯಿಲ್ಲದ ಕಾರಣ ರೈತರು ತೊಂದರೆಯಲ್ಲಿದ್ದಾರೆ. ಶಿಕ್ಷಣದಷ್ಟೆ ಕೃಷಿಗೂ ಹೆಚ್ಚಿನ ಒತ್ತು ಕೊಡಬೇಕು. ವಿಜ್ಞಾನ-ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ಕೊಡಲಾಗುತ್ತಿದೆ. ಅದೇ ರೀತಿ ಕೃಷಿ ಕಡೆಗೂ ಗಮನ ಹರಿಸಬೇಕು ಎಂದರು.
ನಮ್ಮ ದೇಶದ ಪ್ರಧಾನಿ ಬುದ್ಧಿವಂತಿಕೆಯಿಂದ ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದರಿಂದ ನಾವುಗಳೆಲ್ಲಾ ಸುಖವಾಗಿದ್ದೇವೆ. 1975-76ರಲ್ಲಿ ಬರಗಾಲ ಎದುರಾದಾಗ ಅಂದಿನ ಪ್ರಧಾನಿ ಇಂದಿರಾಗಾಂಧಿ ಅಮೇರಿಕಾದಿಂದ ಕೆಂಪು ಜೋಳ ತರಿಸಿ ಹಸಿವು ನೀಗಿಸಿದರು. ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬುಜಗಜೀವನರಾಂ ಅವರು ಕೃಷಿಗೆ ಹೆಚ್ಚಿನ ಮಹತ್ವ ಕೊಟ್ಟ ಕಾರಣದಿಂದ ಭಾರತ ಇಂದು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದೆ ಎಂದು ತಿಳಿಸಿದರು.ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುತ್ತಿದೆ. ನಾಲ್ಕು ಲಕ್ಷ ಕೋಟಿ ರು. ಬಜೆಟ್ನಲ್ಲಿ ಶೇ.45 ರಷ್ಟು ಹಣವನ್ನು ಶಿಕ್ಷಣಕ್ಕೆ ವಿನಿಯೋಗಿಸಲಾಗುತ್ತಿದೆ. ಕೃಷಿ, ತೋಟಗಾರಿಕೆಗೆ ಹೆಚ್ಚಿನ ಅವಕಾಶ ಸಿಗಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಪ್ರೊ.ಆರ್.ಶಶಿಧರ್, ಜಿಕೆವಿಕೆ, ಬೆಂಗಳೂರು ಕೃಷಿ ವಿಜ್ಞಾನ ಸಂಶೋಧನಾ ನಿರ್ದೇಶನಾಲಯದ ಪ್ರಾಧ್ಯಾಪಕ ಡಾ.ಜಿ.ಎಂ.ಸುಜಿತ್, ಅಮೃತ ಆರ್ಗ್ಯಾನಿಕ್ ಫರ್ಟಿಲೈಸರ್ಸ್ ವ್ಯವಸ್ಥಾಪಕ ನಿರ್ದೇಶಕ ನಾಗರಾಜ್ ಕೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರವಿ, ಚಂದ್ರಸಾಗರ.ಎಸ್ ವಿದ್ಯಾರ್ಥಿಗಳು ವಿಚಾರ ಸಂಕಿರಣದಲ್ಲಿ ಉಪಸ್ಥಿತರಿದ್ದರು.