ಸಾರಾಂಶ
ಕನ್ನಡಪ್ರಭ ವಾರ್ತೆ ಸಂಕೇಶ್ವರ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಕೇವಲ ಪಾಕಿಸ್ತಾನ, ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ. ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವರಿಕೆ ಮಾಡಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮತದಾರರು ಕಾಂಗ್ರೆಸ್ಗೆ ಹೆಚ್ಚಿನ ಮತ ಚಲಾಯಿಸುವುದರ ಮೂಲಕ ಗೆಲುವಿಗೆ ಸಹಕರಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಯಾರೇ ಆದರೂ, ಕಾಂಗ್ರೆಸ್ ಗೆಲುವಿಗೆ ಸನ್ನದ್ಧರಾಗಬೇಕು. ಚುನಾವಣೆಯಲ್ಲಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.ಬುಡಾ ನೂತನ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಬಡ ಜನರ ಪರ ಯೋಜನೆ ರೂಪಿಸಿ ಯಶಸ್ವಿಯಾಗಿರುವ ಕಾಂಗ್ರೆಸ್ ಪಕ್ಷದ ಪರ ರಾಜ್ಯದಲ್ಲಿ ಗಾಳಿ ಬೀಸುತ್ತಿದೆ ಎಂದರು.
ಮಾಜಿ ಸಚಿವ ಎ.ಬಿ.ಪಾಟೀಲ ಮಾತನಾಡಿ, ಕಳೆದ ಹತ್ತು ವರ್ಷದಿಂದ ಕೆಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಸುಳ್ಳು ಆಶ್ವಾಸನೆ ನೀಡುತ್ತಾ ಬಂದಿದ್ದಾರೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣೆ ಪೂರ್ವ ನೀಡಿದ್ದ ಭರವಸೆ ಈಡೇರಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ಕಾಂಗ್ರೆಸ್ ಪಕ್ಷಕ್ಕೆ ನೀಡುವಂತೆ ಕರೆ ನೀಡಿದರು.ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿದರು. ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ ಹಟ್ಟಿಹೊಳಿ, ಸಂಕೇಶ್ವರ ಬ್ಲಾಕ್ ಅಧ್ಯಕ್ಷ ಸಂತೋಷ ಮುಡಶಿ, ಹುಕ್ಕೇರಿ ಬ್ಲಾಕ್ ಅಧ್ಯಕ್ಷ ವಿಜಯ ರವದಿ, ಪುರಸಭೆ ಸದಸ್ಯರಾದ ಡಾ.ಜಯಪ್ರಕಾಶ ಕರಜಗಿ, ವಿನೋದ ನಾಯಿಕ, ದಿಲೀಪ್ ಹೊಸಮನಿ, ಮುಖಂಡರಾದ ಚಿದಾನಂದ ಕರದನ್ನವರ, ಮಾರುತಿ ಕುಂದಿ ಇದ್ದರು.
ಬಾಕ್ಸ್ನೀಡಸೊಸಿ ಮಠಕ್ಕೆ ಸಚಿವ ಸತೀಶ ಭೇಟಿ!
ಲೋಕಸಭಾ ಚುನಾವಣೆ ಹಿನ್ನಲೆ ಹುಕ್ಕೇರಿ ತಾಲೂಕಿನ ನೀಡಸೊಸಿ ಸಿದ್ಧಸಂಸ್ಥಾನ ಮಠಕ್ಕೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗುರುವಾರ ಭೇಟಿ ನೀಡಿದರು. ಈ ವೇಳೆ ಶ್ರೀಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಆಶೀರ್ವಾದವನ್ನು ಸತೀಶ ಜಾರಕಿಹೋಳಿ ಪಡೆದರು.