ಯಲಬುರ್ಗಾ: ರೈತರು ಸಾವಯವ ಕೃಷಿ ಪದ್ಧತಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕೃಷಿ ಅಧಿಕಾರಿ ಶಿವಪ್ಪ ಕೊಂಡಗುರಿ ಹೇಳಿದರು.
ತಾಲೂಕಿನ ಬೇವೂರು ಹಾಗೂ ಮುರಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಗುರುವಾರ ಹಮ್ಮಿಕೊಂಡಿದ್ದ ಧರ್ತಿ ಮಾತಾ ಬಚಾವೊ (ಭೂಮಿ ಉಳಿಸಿ) ಕಾರ್ಯಕ್ರಮದಲ್ಲಿ ಮಾತನಾಡಿದರು.ಮಣ್ಣಿನ ಗುಣ ಧರ್ಮ ಹಾಗೂ ಫಲವತ್ತತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಮಣ್ಣಿನ ಆರೋಗ್ಯ ಮತ್ತು ಗುಣಮಟ್ಟ ಕಾಯ್ದುಕೊಳ್ಳಲು ಕೃಷಿ ಪದ್ಧತಿಯಲ್ಲಿ ಅವಶ್ಯಕತೆಗೆ ಮೀರಿ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಬೇಕು. ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಾವಯವ ಗೊಬ್ಬರ ಉಪಯೋಗಿಸಬೇಕು. ಮುಂದಿನ ಪಿಳೀಗೆಗೆ ಮಣ್ಣಿನ ಆರೋಗ್ಯ ಕಾಪಾಡಬೇಕು. ಮಣ್ಣಿನ ನೈಸರ್ಗಿಕ ಗುಣಧರ್ಮ ಜೀವಂತವಾಗಿರಿಸಲು ಮತ್ತು ಸುಸ್ಥಿರ ಕೃಷಿ ಪದ್ಧತಿ ಉತ್ತೇಜಿಸಲು ಈ ಅಭಿಯಾನ ಜನಾಂದೋಲನವಾಗಿ ರೂಪುಗೊಂಡಿದೆ. ರಾಸಾಯನಿಕ ಮುಕ್ತ ಕೃಷಿ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸುವುದರ ಜತೆಗೆ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದರು.
ಕೃಷಿ ಅಧಿಕಾರಿ ಎಸ್.ಸಿ. ಚಿಂಚಲಿ ಮಾತನಾಡಿ, ಅತಿಯಾದ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕ ಬಳಸುವುದರಿಂದ ಮಣ್ಣಿನ ಫಲವತ್ತತೆ ಹಾಗೂ ಭೂಮಿ ಮೇಲಾಗುವ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.ಈ ಸಂದರ್ಭ ಗ್ರಾಪಂ ಅಧಿಕಾರಿ, ಸಿಬ್ಬಂದಿ, ಆತ್ಮಸಿಬ್ಬಂದಿ, ಸಂಜೀವಿನಿ ಸಿಬ್ಬಂದಿ ಹಾಗೂ ರೈತರು ಭಾಗವಹಿಸಿದ್ದರು.