ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಲ್ಲಿಯೇ ಹಿಂದುಳಿದ ಪ್ರದೇಶವಾದ ಚಡಚಣ ಭಾಗದ ನಿರುದ್ಯೋಗಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಚಡಚಣ ಗ್ರಾಮದ ಶ್ರೀಸಂಗಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಗಳ ಆಶ್ರಯದಲ್ಲಿ ಉದ್ಯೋಗ ಮೇಳ- ೨೦೨೫ ಅವರು ಉದ್ಘಾಟಿಸಿ ಮಾತನಾಡಿದರು. ಚಡಚಣ ನಮ್ಮ ಜಿಲ್ಲೆಯಲ್ಲಿಯೇ ಅತೀ ಹಿಂದುಳಿದ ತಾಲೂಕು. ಇಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಪ್ರಥಮ ಆಧ್ಯತೆ ನೀಡಿ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಉದ್ಯೋಗದಾತರು ತಮ್ಮ ಮನೆ ಬಾಗಲಿಗೆ ಉದ್ಯೋಗಗಳನ್ನು ನೀಡಲು ಇಲ್ಲಿ ಆಗಮಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು. ಉದ್ಯೋಗ ಸಿಗದಿದ್ದರೆ ಯಾರು ಕೂಡ ಹತಾಶೆ ಮನೋಭಾವ ಹೊಂದಬಾರದು. ಮುಂದಿನ ದಿನಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ಮನೋಭಾವವನ್ನು ತಾವುಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷ ಕಾಂತಾ ನಾಯಕ ಮಾತನಾಡಿ, ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಶಾಲಾ ಹಂತದಲ್ಲಿ ನನ್ನ ವೃತ್ತಿ ನನ್ನ ಆಯ್ಕೆ ಹಾಗೂ ಕಾಲೇಜು ಹಂತದಲ್ಲಿ ಕಲಿಕೆ ಜೊತೆ ಕೌಶಲ್ಯ ಎಂಬ ವಿಭಿನ್ನ ರೀತಿಯ ಕೌಶಲ್ಯ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ, ಕಾಲೇಜು ವಿಭಾಗದಲ್ಲಿ ಪ್ರಥಮ ಹಂತವಾಗಿ ನಗರದ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಯಲದಲ್ಲಿ ಈ ಕುರಿತು ಈಗಾಗಲೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉತ್ತಮ ಫಲಿತಾಂಶ ದೊರೆತಿದೆ. ಇದರ ಜೊತೆಗೆ ಶಾಲಾ ಹಂತಗಳಲ್ಲಿಯೂ ಶಿಕ್ಷಣ ಜೊತೆಗೆ ಕೌಶಲ್ಯಾಧಾರಿತ ತರಬೇತಿ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶಿಕ್ಷಣಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಮೇಲೆ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಬಹಳ ಅನುಕೂಲವಾಗಲಿದೆ ಎಂದರು.
ಇಲ್ಲಿ ಸುಮಾರು ೪೦ಕ್ಕಿಂತಲೂ ಹೆಚ್ಚು ಕಂಪನಿಗಳು ಆಗಮಿಸಿದ್ದು, ಈಗಾಗಲೇ ೨ ಸಾವಿರ ವಿದ್ಯಾರ್ಥಿಗಳು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಆ.೧೬ ರಂದು ಕಲಬುರ್ಗಿಯಲ್ಲಿ ವಲಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಇಲ್ಲಿ ಉದ್ಯೋಗ ಸಿಗದವರು ಅಲ್ಲಿ ಭಾಗವಹಿಸಬಹುದಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಂಪನಿಗಳಲ್ಲಿ ಆಯ್ಕೆಯಾದ ೫ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಉದ್ಯೋಗ ಪತ್ರ ನೀಡಲಾಯಿತು. ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿಗಳ ಮಹೇಶ ಮಾಳವಾಡೆಕರ, ಚಡಚಣ ಪಪಂ ಅಧ್ಯಕ್ಷ ಮಲ್ಲಿಕಾರ್ಜು ದೋತ್ರೆ, ಉಪಾಧ್ಯಕ್ಷ ಇಲಾಹಿ ನದಾಫ್, ಸಂಗಮೇಶ್ವ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಯಂಕಂಚಿ, ಕಾರ್ಯದರ್ಶಿ ಬಿ.ಎಸ್.ಎಡವೆ, ನಿರ್ದೇಶಕರಾದ ಎಸ್.ಆರ್.ಆವಜಿ, ಆಡಳಿತಾಧಿಕಾರಿ ಚೋರಗಿ ಮುಂತಾದವರು ಇದ್ದರು.
ಉದ್ಯೋಗ ಮೇಳದಲ್ಲಿ ೨೫೪೨ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು ೧೪೫೮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ೨೪೩ ಉದ್ಯೋಗಾಂಕಾಕ್ಷಿಗಳು ಆಯ್ಕೆಯಾಗಿದ್ದಾರೆ. ೨೧೪ ವಿದ್ಯಾರ್ಥಿಗಳು ವೇಟಿಂಗ್ ಲಿಸ್ಟ್ನಲ್ಲಿದ್ದಾರೆ ಒಟ್ಟು ೪೩ ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು , ವಿದ್ಯಾರ್ಥಿಗಳು ನೋಂದಣಿಯಾದ್ದು ೨೫ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು.