ಹುಬ್ಬಳ್ಳಿ:

ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ಮುಸ್ಲಿಂ ನಾಯಕರಲ್ಲಿ ಒಬ್ಬರಾದ, ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್‌ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಶುಕ್ರವಾರ ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಅವರ ಅಭಿಮಾನಿ ಬಳಗದಿಂದ ಪ್ರತಿಭಟಿಸಲಾಯಿತು.

ಪಕ್ಷಕ್ಕೆ ಅತ್ಯಂತ ನಿಷ್ಠರಾಗಿರುವ, 45 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತರುವ ಸಲೀಂಅಹ್ಮದ್‌ ಅವರಿಗೆ ಸಚಿವ ಸ್ಥಾನ ನೀಡಬೇಕು. ಕಿತ್ತೂರು ಕರ್ನಾಟಕ ಭಾಗದಿಂದ 20 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ ನಾಯಕರೊಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ. ಸಿದ್ದರಾಮಯ್ಯ ಸರ್ಕಾರದಲ್ಲೇ ಸಲೀಂ ಅ‍ವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ, ನೀಡಲಿಲ್ಲ. ಸರ್ವ ಸಮಾಜದವರೊಂದಿಗೂ ಉತ್ತಮ ಒಡನಾಟ ಹೊಂದಿದ್ದಾರೆ. ಜತೆಗೆ ಈ ಭಾಗದ ಮುಸ್ಲಿಂ ಮತ ಕ್ರೂಡೀಕರಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಈ ಸರ್ಕಾರದಲ್ಲಾದರೂ ಮೊದಲ ಹಂತದಲ್ಲೇ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ನೀಡಿಲ್ಲ. ಈಗಲಾದರೂ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಉತ್ತರ ಕರ್ನಾಟಕಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಈ ವೇಳೆ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಪ್ರಭಾರಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಜುಟ್ಟಲ್, ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಐ. ಮಕಾಂದಾರ, ಉತ್ತರ ಕರ್ನಾಟಕ ಅಂಜುಮನ್‌ ಕಮಿಟಿ ಅಧ್ಯಕ್ಷ ಹಮೀದ್‌ ಕೊಪ್ಪದ, ನೆಹರು ಪಾಟೀಲ, ಇನಾಯತಖಾನ್‌ ಪಟಾಣ, ರಶೀದ್‌ ಶೇಖ, ಇಮ್ತಿಯಾಜ್ ಕುಮಟಾಕರ, ಸೇರಿದಂತೆ ಹಲವರಿದ್ದರು.