ಕನ್ನಡಪ್ರಭ ವಾರ್ತೆ ಬೇಲೂರು

ಆಶ್ರಯ ಯೋಜನೆಯಲ್ಲಿ ಪೌರಕಾರ್ಮಿಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಸಫಾಯಿ ಕರ್ಮಚಾರಿ ಆಯೋಗಕ್ಕೆ ಪುರಸಭೆಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ತೀರ್ಥಕುಮಾರಿ ಮನವಿ ಸಲ್ಲಿಸಿದ್ದಾರೆ.

ಆಶ್ರಯ ಯೋಜನೆಯಡಿ ಹಂಚಿಕೆ ಮಾಡಲಾಗುವ ನಿವೇಶನಗಳಲ್ಲಿ ಬೇಲೂರು ಪುರಸಭೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪೌರಕಾರ್ಮಿಕರಿಗೆ ಮೊದಲ ಆದ್ಯತೆ ನೀಡುವಂತೆ ಕರ್ನಾಟಕ ಸರ್ಕಾರದ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಅವರಿಗೆ ಮನವಿ ಸಲ್ಲಿಸಿದ್ದು, ತಾವು ಪುರಸಭೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರಿಗೆ ಮೊದಲ ಆದ್ಯತೆ ನೀಡಿ ಆಶ್ರಯ ಯೋಜನೆಯಡಿ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಲಾಗಿತ್ತು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಪ್ರಸ್ತುತ ಸಂತೆ ಮೈದಾನದಲ್ಲಿ ವಾಸವಾಗಿರುವ ನಿರಾಶ್ರಿತರಿಗೆ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡುವ ಕುರಿತು ಸಿದ್ಧತೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪುರಸಭೆಯ ಪೌರಕಾರ್ಮಿಕರನ್ನು ಕಡೆಗಣಿಸಬಾರದು. ಆದ್ದರಿಂದ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ವೇಳೆ ಬೇಲೂರು ಪುರಸಭೆಯ ಎಲ್ಲಾ ಅರ್ಹ ಪೌರಕಾರ್ಮಿಕರಿಗೆ ಮೊದಲ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕೆಂದು ಸಫಾಯಿ ಕರ್ಮಚಾರಿ ಆಯೋಗವನ್ನು ತೀರ್ಥಕುಮಾರಿ ಕೋರಿದ್ದಾರೆ.