ಕನ್ನಡಪ್ರಭ ವಾರ್ತೆ ನಾಗಮಂಗಲ

ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಸಂಸ್ಕಾರದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ಕೊಡಿಸಿದರೆ ಮುಂದಿನ ದಿನಗಳಲ್ಲಿ ಕುಟುಂಬಕ್ಕೆ ಆಧಾರಸ್ತಂಭವಾಗಿ ನಿಂತು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ದೊಡ್ಡಚಿಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಬ್ಯಾಗ್ ರಹಿತ ಶಾಲಾ ದಿನ ‘ಸಂಭ್ರಮ ಶನಿವಾರ’ ಅಭಿಯಾನಲ್ಲಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಶೈಕ್ಷಣಿಕ ಪ್ರಗತಿ ಸಾಧಿಸುವ ಜೊತೆಗೆ ದೇಶದ ದೊಡ್ಡ ಶಕ್ತಿಗಳಾಗಿ ಹೊರಹೊಮ್ಮಬೇಕು ಎಂದರು.

ಮುಖ್ಯ ಶಿಕ್ಷಕರ ಪರಿಶ್ರಮ ಮತ್ತು ಮಕ್ಕಳ ಮೇಲಿನ ಕಾಳಜಿಯಿಂದಾಗಿ ಗ್ರಾಮೀಣ ಪ್ರದೇಶದ ಈ ಸರ್ಕಾರಿ ಶಾಲೆ ಇಷ್ಟೊಂದು ಸಮೃದ್ಧಿಯಾಗಿ ಅಭಿವೃದ್ಧಿ ಹೊಂದಿದೆ. ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಕೊಠಡಿ ಸೇರಿದಂತೆ ನಗರ ಪ್ರದೇಶದ ಪ್ರತಿಷ್ಠಿತ ಶಾಲೆಗಳಲ್ಲಿ ಸಿಗುವ ಎಲ್ಲಾ ರೀತಿಯ ಕಲಿಕಾ ಅನುಕೂಲ ಪಡೆದುಕೊಂಡಿದೆ ಎಂದರು.ಶಿಕ್ಷಕ ವೃಂದ ಎಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿದೆಯೋ ಅಷ್ಟೇ ಪರಿಣಾಮಕಾರಿಯಾಗಿ ದಾನಿಗಳ ಬೆಂಬಲವೂ ಸಿಕ್ಕಿದೆ. ಶಿಕ್ಷಕರು ತರಗತಿಯಲ್ಲಿ ಮಕ್ಕಳಿಗೆ ಅಕ್ಷರ ಜ್ಞಾನದ ದೀಪ ಹಚ್ಚಿಕೊಡುತ್ತಾರೆ. ಅದನ್ನು ಮುಂದೆ ಬೆಳೆಸಿಕೊಳ್ಳುವುದು ಮಕ್ಕಳು ಹಾಗೂ ಪೋಷಕರ ಜವಾಬ್ದಾರಿಯಾಗಿರುತ್ತದೆ ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸುತ್ತಿದೆ. ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರು ಮತ್ತು ಬುದ್ದಿವಂತರನ್ನಾಗಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಶಾಲೆ ಮುಖ್ಯಶಿಕ್ಷಕ ಚೇತನ್, ಶಿಕ್ಷಕರಾದ ವರದೇವಿ, ಉಮಾ, ಮುಖಂಡರಾದ ಡಿ.ಟಿ.ಕೃಷ್ಣೇಗೌಡ, ಡಿ.ಕೆ.ಸುರೇಶ್, ಡಿ.ಕೆ.ರಾಜೇಗೌಡ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿ ಪೋಷಕರು ಇದ್ದರು.