ಪ್ರಾಥಮಿಕ ಶಾಲಾ ಹಂತದಲ್ಲಿ ಶಿಕ್ಷಣ ಇಲಾಖೆಯು ಕ್ರೀಡೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್.ಸುಬ್ಬಯ್ಯ ಅಭಿಪ್ರಾಯ ಪಟ್ಟರು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಪ್ರಾಥಮಿಕ ಶಾಲಾ ಹಂತದಲ್ಲಿ ಶಿಕ್ಷಣ ಇಲಾಖೆಯು ಕ್ರೀಡೆಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್.ಸುಬ್ಬಯ್ಯ ಅಭಿಪ್ರಾಯ ಪಟ್ಟರು.ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ 2026 - 27ನೇ ಸಾಲಿನ ಶನಿವಾರಸಂತೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪಠ್ಯ ನೀಡುತ್ತಿರುವಷ್ಟೆ ಆದ್ಯತೆಯನ್ನು ಕ್ರೀಡೆಗೂ ನೀಡುತ್ತಿದ್ದು ಈ ಮೂಲಕ ಕ್ರೀಡಾ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಸಲಹೆ ನೀಡಿದರು.
ಶನಿವಾರಸಂತೆ ಕ್ಲಸ್ಟರ್ ಸಿಆರ್ಪಿ ಸಿ.ಕೆ.ದಿನೇಶ್ ಮಾತನಾಡಿ, ಕೊಡಗು ಕ್ರೀಡೆಗೆ ಹೆಸರುವಾಸಿಯಾಗಿದ್ದು ಈ ಮೂಲಕ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ಜಿಲ್ಲೆಗೆ ಕೀರ್ತಿ ತಂದುಕೊಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.ಶನಿವಾರಸಂತೆ ಸೆಕ್ರೆಡ್ ಹಾರ್ಟ್ ಶಾಲೆಯ ಪ್ರಾಂಶುಪಾಲ ಥೋಮಸ್ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣ ಕ್ಷೇತ್ರದ ಪ್ರತೀಕಗಳಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕಿವಿ ಮಾತು ಹೇಳಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಸೌಮ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪಲ್ಲವಿ, ನಿವೃತ್ತ ಸೈನಿಕ ಯಶ್ವಂತ್, ಮಾಜಿ ಗ್ರಾ.ಪಂ.ಸದಸ್ಯ ತಸ್ಲಿಮ್, ಹಂಡ್ಲಿ ಕ್ಲಸ್ಟರ್ ಸಿಆರ್ಪಿ ಗಿರೀಶ್, ಗೌಡಳ್ಳಿ ಸಿಆರ್ಪಿ ದೇವರಾಜ್ ಗೌಡ ವಿವಿಧ ಶಾಲಾ ಮತ್ತು ವಿದ್ಯಾಸಂಸ್ಥೆ ಮುಖ್ಯಸ್ಥರಾದ ಡಿ.ಸುಜಲಾದೇವಿ, ಷಣ್ಮುಖಯ್ಯ, ಅಶ್ವಥ್, ಲಲಿತಾ, ಗೋಪಾಲಪುರ ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಮ್ಮ, ಕ್ರೀಡಾಕೂಟ ಕಾರ್ಯದರ್ಶಿ ಕವಿತ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್, ಭಾಸ್ಕರ್, ಪವಿತ್ರ, ಮಂಜುಳ, ಸುರೇಶ್ ಮುಂತಾದವರು ಹಾಜರಿದ್ದರು. ಈ ಸಂದರ್ಭ ಕ್ರೀಡಾ ಕಾರ್ಯದರ್ಶಿ ಕವಿತ ಹಿರಿಯ ಶಿಕ್ಷಕಿ ಯಶೋಧ ಗಣೇಶ್ ಅವರನ್ನು ಸನ್ಮಾನಿಸಲಾಯಿತು.