ಸಾರಾಂಶ
ಕಾರವಾರ: ಜಿಲ್ಲೆಯು ಆಕರ್ಷಿಕ ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು, ಮುಂದಿನ ದಿನಗಳಗಲ್ಲಿ ಅತ್ಯಾಕರ್ಷಣೆಯ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಪ್ರವಾಸಿಗರ ಆಕರ್ಷಿಸಲು ಗೋವಾ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೆಎಸ್ಎಂಸಿಎ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ ಕೆ. ಸೈಲ್ ತಿಳಿಸಿದರು.
ಭಾನುವಾರ ಕಾರವಾರದ ರವೀಂದ್ರನಾಥ್ ಠಾಗೋರ್ ಕಡಲ ತೀರದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆದ ಗಾಳಿಪಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸೆ. 27ರಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.ಗೋವಾ ಬೀಚ್ಗಳಿಗಿಂತ ಪ್ರವಾಸೋದ್ಯಮಕ್ಕೆ ಪೂರಕವಾದ ಬೀಚ್ಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಗೋವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಸಿಆರ್ಝಡ್ ಅನುಮತಿ ಪಡೆದು ಬೀಚ್ಗಳನ್ನು ಅಭಿವೃದ್ಧಿಪಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ ಉದ್ಯೋಗ ನೀಡುವ ಮೂಲಕ ಸ್ಥಳೀಯ ಸಾಂಪ್ರದಾಯಿಕ ವಸ್ತುಗಳನ್ನು ಪ್ರವಾಸಿಗರಿಗೆ ತಿಳಿಸುವ ಮುಖಾಂತರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದರು.ನಗರದ ರಾಷ್ಟ್ರೀಯ ಹೆದ್ದಾರಿ ಫ್ಲೈಒವರ್ ಕೆಳಗಡೆ ಸಣ್ಣ ಅಂಗಡಿಗಳನ್ನು ನಿರ್ಮಾಣ ಮಾಡಿ ಸ್ಥಳೀಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ಅರ್ಥಿಕವಾಗಿ ಸಬಲರನ್ನಾಗಿಲಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಪ್ರವಸೋದ್ಯಮ ಇಲಾಖೆ ವತಿಯಿಂದ ಚಿತ್ರಕಲೆ, ಗಾಳಿಪಟ ಸ್ಪರ್ಧೆ ಹಾಗೂ ಮರಳು ಶಿಲ್ಪಿ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಕಂಡು ಸಂತಸ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ. ಇಲ್ಲಿಗೆ ಆಗಮಿಸುವ ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಲು ಕಾಫಿ ಟೇಬಲ್ ಬುಕ್ ಮಾಡಲು ನಿರ್ಧರಿಸಲಾಗಿದೆ. ಇದರ ಕವರ್ ಪೇಜ್ ಸೋಮವಾರದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.ಇದೇ ಸಂದರ್ಭದಲ್ಲಿ ಮರಳು ಶಿಲ್ಪ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಇತರರು ಇದ್ದರು.