ಇಡೀ ರಾಜ್ಯದಲ್ಲೇ ಎಲ್ಲೂ ಇಲ್ಲದಂತೆ ಈ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಿಶ್ರಾಂತಿ ಪಡೆಯಲು ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿದೆ.
ಅರಹಳ್ಳಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಸಕ ಕೊತ್ತೂರು ಜಿ. ಮಂಜುನಾಥ್
ಕನ್ನಡಪ್ರಭ ವಾರ್ತೆ ಕೋಲಾರಮಾನವನ ಜೀವನದಲ್ಲಿ ಎಲ್ಲವೂ ನಶ್ವರ. ಆದರೆ ನಾವು ಗಳಿಸುವ ವಿದ್ಯೆ ಮತ್ತು ಓದಿನ ದಾಖಲೆಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ. ಅಂತಹ ಜ್ಞಾನ ನೀಡಿದ ಗುರುಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಶಾಸಕ ಕೊತ್ತೂರು ಜಿ. ಮಂಜುನಾಥ್ ಹೇಳಿದರು.
ನಗರದ ಹೊರವಲಯದ ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ವಾರ್ಷಿಕೋತ್ಸವ ಹಾಗೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಇಡೀ ರಾಜ್ಯದಲ್ಲೇ ಎಲ್ಲೂ ಇಲ್ಲದಂತೆ ಈ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ವಿಶ್ರಾಂತಿ ಪಡೆಯಲು ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿದೆ. ಅಲ್ಲದೆ ಅಭಿವೃದ್ದಿ ಪಡಿಸಲಾಗುತ್ತಿದೆ ಅಲ್ಲದೆ ಮತ್ತಷ್ಟು ಅಭಿವೃದ್ಧಿಗೆ ೨.೫ ಕೋಟಿ ರು. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಕಾಲೇಜು ೨೫ ವರ್ಷ ತುಂಬಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಿಲ್ವರ್ ಜೂಬ್ಲಿ ಅತ್ಯಂತ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿ, ಕಾಲೇಜಿನಲ್ಲಿ ಹಬ್ಬದ ವಾತಾವರಣ ನಿರ್ಮಿಸೋಣ. ಕರ್ನಾಟಕದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ಬಂದಿರುವುದು ಕೋಲಾರ ಕ್ಷೇತ್ರಕ್ಕೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಮೊದಲ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು.ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್ ಮಾತನಾಡಿ, ಒಮ್ಮೆ ಬೆಂಗಳೂರಿನ ಹೈಕೋರ್ಟ್ ಅಥವಾ ಸಿಟಿ ಸಿವಿಲ್ ನ್ಯಾಯಾಲಯಗಳಿಗೆ ಹೋದರೆ ಅಲ್ಲಿ ಕೋಲಾರದ ವಕೀಲರದ್ದೇ ಪಾರುಪತ್ಯ. ಈ ಮಣ್ಣಿನ ಗುಣವೇ ಹಾಗಿದೆ. ರಾಜ್ಯದ ಪ್ರಥಮ ಸಿಎಂ ಕೆ.ಸಿ.ರೆಡ್ಡಿರಿಂದ ಹಿಡಿದು, ಸರ್ಕಾರಕ್ಕೆ ಹಲವು ಸಲಹೆಗಳನ್ನು ನೀಡಿದ ನ್ಯಾಯಮೂರ್ತಿ ನಾಗಮೋಹನ್ ದಾಸ್ವರೆಗೆ ಕೋಲಾರ ಜಿಲ್ಲೆಯ ಕೊಡುಗೆ ಅಪಾರ ಕೊಡುಗೆ ಇತಿಹಾಸ ಜಿಲ್ಲೆಯ ಹಿರಿಮೆ ವಿವರಿಸಿದರು.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಶ್ರೀನಿವಾಸಗೌಡರ ಶ್ರಮದಿಂದ ಇಡೀ ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಅನುದಾನದೊಂದಿಗೆ ಕಾನೂನು ಕಾಲೇಜು ಆರಂಭವಾಯಿತು. ಇಲ್ಲಿ ಓದಿದ ಸುಮಾರು ೨,೦೦೦ ವಿದ್ಯಾರ್ಥಿಗಳು ವಕೀಲರಾಗಿದ್ದು, ಅವರಲ್ಲಿ ೪೦ಕ್ಕೂ ಹೆಚ್ಚು ಮಂದಿ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸರ್ಕಾರದಿಂದ ೭ ಕೋಟಿ ರು. ವೆಚ್ಚದಲ್ಲಿ ನೂತನ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ ಎಂದು ಮಾಹಿತಿ ನೀಡಿದರು.ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲಾರರು, ಹಾಗಾಗಿ ವಿದ್ಯಾರ್ಥಿಗಳು ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನಡೆಯಬೇಕು, ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ.ಎನ್.ಎಸ್. ಅಂಬೇಡ್ಕರ್ ವಹಿಸಿದ್ದರು. ವೇದಿಕೆಯಲ್ಲಿ ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟಿ ಆಗ್ರಹಾರ ಚೌಡರೆಡ್ಡಿ, ಕಾಲೇಜು ಅಲುಮಿನಿ ಸಂಘದ ಅಧ್ಯಕ್ಷ ವಿ.ಕೆ.ಪ್ರಶಾಂತ್, ಉಪಾಧ್ಯಕ್ಷ ಜಾಕೀರ್ ಹುಸೇನ್, ಖಜಾಂಚಿ ಕೆ.ಎಂ. ಚೌಡೇಗೌಡ, ಕಾಲೇಜು ಸಮಿತಿ ಸದಸ್ಯ ನುಕ್ಕನಹಳ್ಳಿ ಶ್ರೀನಿವಾಸ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಇದ್ದರು.ಇದೇ ಸಂದರ್ಭದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಶಾಸಕ ಕೊತ್ತೂರು ಜಿ.ಮಂಜುನಾಥ್ ಅವರು ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಕಟ್ಟಡದ ಕಾಮಗಾರಿ ವೀಕ್ಷಿಸಿ, ಪರಿಶೀಲನೆ ನಡೆಸಿದರು. ಕಟ್ಟಡದ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, "ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಅತ್ಯಂತ ಎಚ್ಚರಿಕೆಯಿಂದ ಮತ್ತು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಸ್ಥಳದಲ್ಲಿದ್ದ ಗುತ್ತಿಗೆದಾರನಿಗೆ ಖಡಕ್ ಸೂಚನೆ ನೀಡಿದರು.