ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಅಭಿನಂದನೆ ಸಲ್ಲಿಸುವುದು ನನ್ನ ಆದ್ಯ ಕರ್ತವ್ಯ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.

ತಾಲೂಕಿನ ಜೈನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಪೌಢಶಾಲಾ ಮುಖ್ಯ ಶಿಕ್ಷಕರು, ವಸತಿ ಶಾಲಾ ಪ್ರಾಂಶುಪಾಲರು, ಹಿರಿಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ನಮ್ಮ ತಾಲೂಕು 2ನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಇದಕ್ಕೆ ಕಾರಣರಾದ ಮಕ್ಕಳು, ಶಿಕ್ಷಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಜಿಪಂ ಸಿಇಒ ಕೆ.ಆರ್.ನಂದಿನಿ ಅವರ ವಿಶೇಷ ಕಾಳಜಿಯಿಂದ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಕಾರಣವಾಗಿದೆ ಎಂದರು.

ಇತ್ತೀಚೆಗೆ ಸರ್ಕಾರಿ ಶಾಲೆಗಳು ಪೋಷಕರ ನಂಬಿಕೆ ಕಳೆದುಕೊಳ್ಳುತ್ತಿವೆ. ಸರ್ಕಾರಿ ಶಾಲೆಗಳು ಮುಚ್ಚಿದರೆ ಮುಂದಿನ ದಿನಗಳಲ್ಲಿ ರೈತಾಪಿ ವರ್ಗದ ಮಕ್ಕಳು, ಕೃಷಿ ಕಾರ್ಮಿಕರು ಮತ್ತಿತರ ಬಡವರ ಮಕ್ಕಳು ಶಿಕ್ಷಣ ವಂಚಿತರಾಗಲಿದ್ದಾರೆ ಎಂದು ಎಚ್ಚರಿಸಿದರು.


ಖಾಸಗಿ ಶಾಲೆಗಳಿಂದ ಮಕ್ಕಳನ್ನು ಮತ್ತೆ ಸರ್ಕಾರಿ ಶಾಲೆಗಳ ಕಡೆಗೆ ಆಕರ್ಷಿಸುವ ಕೆಲಸ ಆಗಬೇಕು. ಸರ್ಕಾರಿ ಶಾಲೆಗಳಲ್ಲಿ ಕಲಿಕಾ ವಾತಾವರಣವನ್ನು ನಿರ್ಮಿಸಿ ಸರ್ಕಾರಿ ಶಾಲೆಗಳ ಮೇಲಿನ ಜನರ ನಂಬಿಕೆ ಬಲಪಡಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಮೇಲಿದೆ ಎಂದರು.

ಇದೇ ವೇಳೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿ ತಾಲೂಕಿನ ಮೂರು ಟಾಪರ್ ಗಳಾದ ಲಾವಣ್ಯ (623), ಧನ್ಯತಾ (622) ಹಾಗೂ ಚರಣ್ಯ(620) ಮತ್ತು ಶೇ.100ರಷ್ಟು ಫಲಿತಾಂಶ ಬಂದ ಶಾಲೆ ಹಾಗೂ ಮುಖ್ಯಸ್ಥರನ್ನು ಶಾಸಕರು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎನ್.ಲೋಕೇಶ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಬಿಇಒ ವೈ.ಕೆ.ತಿಮ್ಮೇಗೌಡ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಚ್.ಕೆ.ಮಂಜುನಾಥ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯತೀಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ. ಎಸ್.ಆರ್.ಆನಂದ್ ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಭುಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಕಾರ್ಯದರ್ಶಿ ಗ್ರಾಮ ಭಾರತಿ ಕೃಷಅಮ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ.ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.