ಕನ್ನಡಪ್ರಭ ವಾರ್ತೆ ವಿಜಯಪುರ

ಕುಖ್ಯಾತ ರೌಡಿ ಮಡಿವಾಳಯ್ಯ ಊರ್ಫ ಮಡುಸ್ವಾಮಿ ಪಂಚಯ್ಯ ಹಿರೇಮಠ ಅವರನ್ನು ಕರ್ನಾಟಕ ಅಪಾಯಕಾರಿ ಚಟುವಟಿಕೆಗಳ ತಡೆ ಅಧಿನಿಯಮ-1985 (ಗೂಂಡಾ ಕಾಯ್ದೆ) ಅಡಿಯಲ್ಲಿ ಬಂಧಿಸಿ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಆನಂದ.ಕೆ ಆದೇಶ ಹೊರಡಿಸಿದ್ದಾರೆ.

ಆರೋಪಿ ನಗರದ ಶಿವಶಕ್ತಿ ನಗರ ನಿವಾಸಿಯಾಗಿದ್ದು, ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯಾಪಾರ, ಮಾದಕ ದ್ರವ್ಯ ಅಪರಾಧ, ಜೂಜಾಟ ಸೇರಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿರುವ ಗುಂಡಾ ವ್ಯಕ್ತಿ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಆರೋಪಿ ವೃತ್ತಿಪರ ಅಪರಾಧಿಯಾಗಿದ್ದು, ಮಾನವ ಶರೀರ ಹಾಗೂ ಸಾರ್ವಜನಿಕ ಆಸ್ತಿಗೆ ಸಂಬಂಧಿಸಿದ ಗಂಭೀರ ಅಪರಾಧಗಳಲ್ಲಿ ತೊಡಗುವ ಪ್ರವೃತ್ತಿ ಹೊಂದಿದ್ದಾನೆ. ಸಮಾಜದ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆತನನ್ನು ಬಂಧನದಲ್ಲಿಡುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಅಧಿಸೂಚನೆಯಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ. ಆದೇಶದ ಜಾರಿಗೆ ಗೋಲಗುಂಬಜ್ ವೃತ್ತದ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಬಂಧನ ಜಾರಿಗೊಳಿಸಿದ ದಿನಾಂಕ, ಸಮಯ ಹಾಗೂ ಸ್ವೀಕೃತಿ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.