ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ

| Published : Sep 30 2024, 01:29 AM IST / Updated: Sep 30 2024, 12:24 PM IST

Eshwar Malpe
ಆಪತ್ಬಾಂದವ ಈಶ್ವರ್ ಮಲ್ಪೆಗೆ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿಲಿ: ಯಶ್ಪಾಲ್ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

  ಉಡುಪಿ : ಯಾವುದೇ ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿಯೂ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. 

ಅವರ ಈ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು.ಕಾರ್ಯಾಚರಣೆಯ ಕೊನೆಯ ಹಂತದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಈಶ್ವರ್ ಮಲ್ಪೆಯವರನ್ನು ಅವಮಾನಿಸಿ ಕಾರ್ಯಾಚರಣೆಗೆ ಅವಕಾಶ ನೀಡದಿರುವುದು ದುರದೃಷ್ಟಕರ ಎಂದವರು ಹೇಳಿದ್ದಾರೆ.

ರಾಜ್ಯಾದ್ಯಂತ ಎಲ್ಲೇ ಕರೆ ಬಂದರೂ ಪ್ರತಿಫಲಾಪೇಕ್ಷೆ ಇಲ್ಲದೆ ರಕ್ಷಣಾ ಕಾರ್ಯದಲ್ಲಿ ತೊಡುಗುವ ಈಶ್ವರ್ ಮಲ್ಪೆ ಅವರ ಸೇವೆಯನ್ನು ಎಲ್ಲರೂ ಗೌರವಿಸಬೇಕಿದೆ.ಈಶ್ವರ್ ಮಲ್ಪೆ ತಮ್ಮ ಕೌಟುಂಬಿಕ ಸಮಸ್ಯೆಗಳ ನಡುವೆಯೂ ಸಾವಿರಾರು ಮೃತದೇಹಗಳನ್ನು ಕಠಿಣ ಸಂದರ್ಭದಲ್ಲಿಯೂ ಪತ್ತೆಹಚ್ಚಿ ಸಂಬಂಧಿಕರಿಗೆ ಹಸ್ತಾಂತರಿಸಿ, ಹಲವಾರು ಮಂದಿಯ ಜೀವವನ್ನು ರಕ್ಷಿಸಿದ ಅತ್ಯಮೂಲ್ಯ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರೆ ಪ್ರಶಸ್ತಿಗೂ ಘನತೆ ಹೆಚ್ಚಲಿದೆ.

ಆಪತ್ಭಾಂದವರಾಗಿ ಸೇವೆ ಸಲ್ಲಿಸುವ ಈಶ್ವರ್ ಮಲ್ಪೆ ನಮಗೆಲ್ಲ ಸದಾ ಸ್ಫೂರ್ತಿಯಾಗಿದ್ದು, ಸ್ವಾರ್ಥರಹಿತ ಸೇವೆಗೆ ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತೆ ನಾಡಿನ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಯಶ್ಪಾಲ್ ತಿಳಿಸಿದ್ದಾರೆ.