ಸಾರಾಂಶ
ಶಿಗ್ಗಾಂವಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಿಡಿಕಾರಿದರು.ಪಟ್ಟಣದಲ್ಲಿ ಶಿಗ್ಗಾಂವಿ, ಸವಣೂರ ತಾಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳಿಗೆ ಆಯ್ಕೆಯಾದ ೧೧ ನೂತನ ಪದಾಧಿಕಾರಿಗಳಿಗೆ ಶಿಗ್ಗಾಂವಿ ಹಾಗೂ ಸವಣೂರು ಮಂಡಳದ ನೂತನ ನೇಮಕ ಪತ್ರ ವಿತರಣೆ , ಪದಾಧಿಕಾರಿಗಳಾಗಿ ಆಯ್ಕೆಯಾದ ಕಾರ್ಯಕರ್ತರಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಅವಳಿ ತಾಲೂಕಲ್ಲಿ ಕಳ್ಳತನ, ಕೊಲೆ, ಸುಲಿಗೆ ಹೆಚ್ಚಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಕಳೆದ ಒಂದು ವರ್ಷದಿಂದ ಪಕ್ಷದ ಚಟುವಟಿಕೆಗಳು ಕುಂಠಿತಗೊಂಡಿವೆ, ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಬೆಳೆಗಳಿಗೆ ಅಧಿಕವಾಗಿ ಹಾನಿಯಾಗಿದ್ದು, ಕೇವಲ ೧೬,೦೦೦ ಹೆಕ್ಟೇರ್ ಪ್ರದೇಶ ಮಾತ್ರ ಹಾನಿಯಾಗಿದೆ ಎಂದು ತೋರಿಸಲಾಗಿದೆ. ಹಾನಿಯಾದ ರೈತರಿಗೆ ಅನ್ಯಾಯವಾಗುತ್ತಿದ್ದು, ತಕ್ಷಣ ಮರು ಸಮೀಕ್ಷೆ ನಡೆಸಿ ಪರಿಹಾರ ನೀಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರು ಶ್ರಮವಹಿಸಬೇಕು. ವಿವಿಧ ಘಟಕದ ಪದಾಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿ ನಿರ್ವಹಿಸಬೇಕು ಎಂದರು.ಬಿಜೆಪಿ ಮುಖಂಡ ಭರತ ಬೊಮ್ಮಾಯಿ, ತಾಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ, ಸವಣೂರ ತಾಲೂಕು ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ, ಮುಖಂಡರಾದ ಶಿವಾನಂದ ಮ್ಯಾಗೇರಿ, ಮಲ್ಲೇಶಪ್ಪ ಹರಿಜನ, ಶಿವಾನಂದ ಸೊಬರದ, ರವಿ ಕುಡವಕ್ಕಲಿಗೇರ, ನರಹರಿ ಕಟ್ಟಿ, ಹೊನ್ನಪ್ಪ ಹೂಗಾರ ಇದ್ದರು.