ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು, ರಸ್ತೆಗಳು ಸೇರಿದಂತೆ ವಿವಿಧ ಅಭಿವೃಧ್ದಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದೆ.

ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋರಣ ನೆರವೇರಿಸಿದ ಸಚಿವ

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು, ರಸ್ತೆಗಳು ಸೇರಿದಂತೆ ವಿವಿಧ ಅಭಿವೃಧ್ದಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.ಸೋಮವಾರ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋರಣ ನೆರವೇರಿಸಿ ಮಾತನಾಡಿದರು.ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಸರ್ವರನ್ನೂ ಒಳಗೊಂಡ, ಸರ್ವರನ್ನು ಬೆಸೆಯುವ ಮತ್ತು ಸರ್ವರಿಗೂ ಸಮಪಾಲು-ಸಮಬಾಳು ನೀಡಬೇಕೆಂಬ ಆಶಯದೊಂದಿಗೆ ಬಡವರ, ದಮನಿತರ, ಶೋಷಿತರ ಏಳಿಗೆಗಾಗಿ ಸರ್ಕಾರ ವಿಶೇಷ ಒತ್ತು ನೀಡಿದೆ. ನಮ್ಮ ಸಂವಿಧಾನವನ್ನು ದೇಶದ ಪ್ರತಿಯೊಬ್ಬ ಸಾಮಾನ್ಯ ಜನತೆಗೂ ಅನುಕೂಲವಾಗುವ ರೀತಿಯಲ್ಲಿ ರಚಿಸಲಾಗಿದ್ದು, ಸಮಾನತೆಯ ಪ್ರಮುಖ ಉದ್ದೇಶ ಹೊಂದಿದೆ. ರಾಜ್ಯದಲ್ಲಿ ಪ್ರತಿಯೊಬ್ಬ ಪ್ರಜೆಗೂ ನೆಮ್ಮದಿಯ ಜೀವನದೊಂದಿಗೆ, ಸುರಕ್ಷಿತ ಮತ್ತು ನೆಮ್ಮದಿಯ ವಾತಾವಾರಣ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿ ತೊಂದರೆಯಾದಂತೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡಲು ₹700 ಕೋಟಿ ವೆಚ್ಚದಲ್ಲಿ ಕುಡಿಯವ ನೀರಿನ ಯೋಜನೆ ಕೈಗೊಳ್ಳಲಾಗಿದೆ. ಹೊನ್ನಾವರದ ಶರಾವತಿ ನದಿಗೆ ₹200 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ಮಂಜೂರಾಗಿದೆ. 13 ಬಂದರುಗಳನ್ನು ₹200 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮಾಡಲಾಗುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜಿಲ್ಲೆಯ 10 ದ್ವೀಪಗಳನ್ನು ಗುರುತಿಸಲಾಗಿದ್ದು, ಈ ದ್ವೀಪಗಳನ್ನು ಅಭಿವೃದ್ಧಿ ಪಡಸಿ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾರವಾರದಲ್ಲಿ ಈಗಾಗಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭವಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತಂತೆ ಈ ಬಾರಿಯ ಬಜೆಟ್‌ನಲ್ಲಿ ಘೋಷಣೆಯಾಗಲಿದ್ದು, ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜನತೆಗೆ ತಲುಪಿಸಿದ್ದು, ಶಕ್ತಿ ಯೋಜನೆಯಲ್ಲಿ ₹13.72 ಕೋಟಿಗೂ ಅಧಿಕ ಮಹಿಳೆಯರು ಉಚಿತ ಪ್ರಯಾಣಿಸಿದ್ದು, ಇದರ ಮೊತ್ತ ₹405 ಕೋಟಿ ಗಳಾಗಿದೆ. ಕುಟುಂಬದ ಮನೆಯ ಯಜಮಾನಿಗೆ ಪ್ರತೀ ತಿಂಗಳು ₹2,000 ನೀಡುವ ಗೃಹಲಕ್ಷ್ಮಿ ಯೋಜನೆಯಡಿ, ಜಿಲ್ಲೆಯಲ್ಲಿ 3,36,879 ಮಹಿಳೆಯರನ್ನು ನೋಂದಾಯಿಸಲಾಗಿದ್ದು, ₹1,299 ಕೋಟಿ ರುಗಳನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹510.98 ಕೋಟಿ ಮೊತ್ತದ ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ₹298.89 ಕೋಟಿ ಹಾಗೂ ಯುವನಿಧಿ ಯೋಜನೆಯಡಿ ₹18 ಕೋಟಿ ನೆರವು ನೀಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ, ಅಂಗಾಂಗ ದಾನ ಮಾಡಿದವರ ಕುಟುಂಬಕ್ಕೆ ಅಭಿನಂದನೆ, ಕೃಷಿ ಪಂಡಿತ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರದ ಪ್ರೇಮ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಕೆ. ಸೈಲ್, ವಿಧಾನಪರಿಷತ್ ಶಾಸಕ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಉಪಸ್ಥಿತರಿದ್ದರು.