ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ

| Published : Jul 04 2025, 11:46 PM IST

ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧ: ಶಾಸಕ ನಾಗರಾಜ
Share this Article
  • FB
  • TW
  • Linkdin
  • Email

ಸಾರಾಂಶ

ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.

ತಾಳೂರು ಗ್ರಾಮದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಭೂಮಿಪೂಜೆ

ಕನ್ನಡಪ್ರಭ ವಾರ್ತೆ ಸಿರುಗುಪ್ಪ

ಗ್ರಾಮೀಣ ಭಾಗದ ಜನತೆಯ ವೈಯಕ್ತಿಕ ಆರೋಗ್ಯಕ್ಕಾಗಿ ನಗರಗಳಿಗೆ ಆಗಮಿಸಿ ಹಣ ವೆಚ್ಚ ಮಾಡುವುದನ್ನು ತಪ್ಪಿಸಲು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಪರಿಕರಗಳ ಒದಗಿಸುವಿಕೆ, ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣ ಮಾಡುವ ಮೂಲಕ ಜನತೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿಯೇ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಬಿ.ಎಂ. ನಾಗರಾಜ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ₹50 ಲಕ್ಷ ಅನುದಾನದಡಿ ಸಿರುಗುಪ್ಪ ತಾಲೂಕಿನ ತಾಳೂರು ಗ್ರಾಮದಲ್ಲಿ ಶುಶ್ರೂಷಣಾಧಿಕಾರಿ ಹಾಗೂ ಡಿ-ಗ್ರೂಪ್ ಸಿಬ್ಬಂದಿಯ ವಸತಿಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜನರ ಆರೋಗ್ಯದ ಕಾಳಜಿ ವಹಿಸುವ ಉನ್ನತ ಮಹಾತ್ವಾಕಾಂಕ್ಷಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, ಈಗಾಗಲೇ ಸಿರುಗುಪ್ಪ ಪಟ್ಟಣಕ್ಕೆ 150 ಹಾಸಿಗೆಗಳ ಹೈಟೆಕ್ ಆಸ್ಪತ್ರೆಯ ನಿರ್ಮಾಣಕ್ಕೆ ಸರಕಾರದ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈಗಾಗಲೇ ಜಿಲ್ಲೆಯ ಕುರವಳ್ಳಿ ಹಾಗೂ ರಾವಿಹಾಳ ಗ್ರಾಮಗಳಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯವರು ಕೇಂದ್ರ ಸ್ಥಾನದಲ್ಲಿಯೇ ಲಭ್ಯವಾಗಲು ಸಹಾಯಕವಾಗಿ ವಸತಿಗೃಹಗಳ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶಬಾಬು, ಸಿರುಗುಪ್ಪ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ರಕ್ತಪರೀಕ್ಷೆ ಮಾಡಲು ಸೆಲ್ ಕೌಂಟರ್‌ಗಳನ್ನು ಹಾಗೂ ಹೃದಯ ಸಮಸ್ಯೆಗಳ ಆರಂಭಿಕ ತೊಂದರೆಗಳನ್ನು ಗುರುತಿಸಲು ಇಸಿಜಿ ಯಂತ್ರಗಳನ್ನು ಕ್ಷೇತ್ರದ ಶಾಸಕರ ಮುತವರ್ಜಿಯಿಂದ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯವಿರುವವರು ಹಣ ವೆಚ್ಚ ಮಾಡದೇ ಸ್ಥಳೀಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿದರು.

ಈ ಸಂದರ್ಭ ತಾಳೂರು ಗ್ರಾಪಂ ಉಪಾಧ್ಯಕ್ಷ ಬಲ್ಲೂರಪ್ಪ, ಆಡಳಿತ ವೈದ್ಯಾಧಿಕಾರಿ ಡಾ. ಸುನೀಲ್, ಗ್ರಾಪಂ ಸದಸ್ಯರಾದ ಪುರುಷೋತ್ತಮರೆಡ್ಡಿ, ರಾಮಾಂಜನಿ, ಫಕೀರಪ್ಪ, ದೇವರೆಡ್ಡಿ, ತುರು ಮುಂದಪ್ಪ, ಊಳೂರು ಈರಣ್ಣ ನೇಣಿಕಪ್ಪ, ದಿಬ್ಬಲಿ ಗಾದಿಲಿಂಗಪ್ಪ, ಅಂಬ್ರೇಶ, ಮಾಳಮ್ಮ, ಅಭಿಯಂತರರಾದ ಚಂದನಗೌಡ, ರಾಜೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಪ್ಪ ಸೇರಿದಂತೆ ಗ್ರಾಮಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು.