ಕನ್ನಡಪ್ರಭ ವಾರ್ತೆ ವಿಜಯಪುರ
ಸತತ ಮೂರು ವರ್ಷಗಳ ಕಾಲ ದೇಶಾದ್ಯಂತ ಸಂಚಲನ ಸೃಷ್ಠಿಸಿದ ಪಂಚ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರಕ್ಕೆ ವಿಶೇಷ ಗೌರವ ತರುವುದರ ಜೊತೆಗೆ ದೇಶಕ್ಕೆ ಮಾದರಿಯಾಗಿವೆ. ನಮ್ಮ ಸರ್ಕಾರ ಜಾರಿಗೊಳಿಸಿದ ಈ ಯೋಜನೆಗಳನ್ನು ಪ್ರಸ್ತುತ ಸಿಎಂ ಮುಂದುವರಿಸುತ್ತಾರೆ. ಅಲ್ಲದೇ, ಅಧಿಕಾರ ವಹಿಸಿಕೊಂಡ 100 ದಿನಗಳಲ್ಲಿ 45 ವಿಶೇಷ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ, ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಮಿತ್ರ, ಬಡವರ ಬಂಧು ಯೋಜನೆಯಲ್ಲಿ ಒಂದು ಹೆಕ್ಟೇರ್ವರೆಗಿನ ಜಮೀನು ಹೊಂದಿರುವ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಾಡಿಗೆ ಮೊತ್ತದಲ್ಲಿ ಶೇ.50 ರಷ್ಟು ಸಬ್ಸಿಡಿ ನೀಡಬೇಕೆಂದು ನಮ್ಮ ಸರ್ಕಾರ ನಿರ್ಧರಿಸಿದೆ. ಭಾರತ್ ಜೋಡೋ ಯುವಕ ಸಂಘ ಮಿಷನ್, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 6000, ನಗರ ಪ್ರದೇಶಗಳಲ್ಲಿ 4000 ಸಂಘಗಳ ಸ್ಥಾಪಿಸುವುದು ಮತ್ತು ವಾರ್ಷಿಕ ತಲಾ ₹10 ಲಕ್ಷ ಅನುದಾನದಂತೆ ವಾರ್ಷಿಕ 1 ಸಾವಿರ ಕೋಟಿ ವೆಚ್ಚದಲ್ಲಿ ಯುವಕರಲ್ಲಿ ಆರೋಗ್ಯ, ಕೌಶಲ್ಯ, ಸಾಮಾಜಿಕ ಸಾಮರಸ್ಯ ಉತ್ತೇಜನ ನೀಡಲಾಗುವುದು ಎಂಬುದಾಗಿ ಹೇಳಿದರು.
ಇದಕ್ಕೂ ಮುನ್ನ ದೇಶದ ಸ್ವಾತಂತ್ರ್ಯಕ್ಕಾಗಿ ಜಿಲ್ಲೆ ಸೇರಿದಂತೆ ದೇಶವ್ಯಾಪಿ ದೇಶಕ್ಕಾಗಿ ಪ್ರಾಣ ತೆತ್ತ ಕೆಚ್ಚೆದೆಯ ಹೋರಾಟ ಮಾಡಿದವರ ಹೆಸರನ್ನು ಸ್ಮರಿಸಿದ ಸಚಿವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಈ ದಿನವನ್ನು ರಾಷ್ಟ್ರೀಯ ಐಕ್ಯತೆ ಬಲಪಡಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ದಿನವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದವರನ್ನು ಸನ್ಮಾನಿಸಲಾಯಿತು. ದೃಷ್ಟಿದೋಷಯುಳ್ಳ ಎಸ್.ಎಸ್.ಎಲ್.ಸಿ ನಂತರದಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಟಾಕಿಂಗ್ ಲ್ಯಾಪಟ್ಯಾಪ್, ಕ್ರೀಡಾ ವ್ಹೀಲ್ಚೇರ್ ವಿತರಿಸಲಾಯಿತು. ಸೈಕ್ಲಿಷ್ಟಗಳಿಗೆ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ₹ 93.13 ಲಕ್ಷ ವೆಚ್ಚದಲ್ಲಿ 13 ಸೈಕಲ್ ಗಳನ್ನು ವಿತರಿಸಿದರು. ಬಳಿಕ ವೃಕ್ಷೋಥಾನ್ ಓಟದ ನೋಂದಣಿಗೆ ಸಚಿವರು ಚಾಲನೆ ನೀಡಿದರು.ಎಲ್ಲೆಡೆ ಸ್ವಾತಂತ್ರೋತ್ಸವದ ಸಡಗರ: ಸ್ವಾತಂತ್ರೋತ್ಸವ ದಿನಾಚರಣೆಯನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಳಿಕ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಿದವು.
ಈ ಸಂದರ್ಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಮೇಯರ್ ಎಂ.ಎಸ್ ಕರಡಿ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಉಪಮೇಯರ್ ಸುಮಿತ್ರಾ ಜಾಧವ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.