ಸರ್ಕಾರಿ ನೌಕರರು ಪಾರದರ್ಶಕತೆಯಿಂದ ಜವಾಬ್ದಾರಿ ನಿಭಾಯಿಸಬೇಕು: ಜಿಲ್ಲಾಧಿಕಾರಿ

| Published : Feb 07 2024, 01:47 AM IST / Updated: Feb 07 2024, 01:48 AM IST

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲರೂ ಒಂದು ತಂಡವಾಗಿ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗಳನ್ನು ನಡೆಸುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಸರ್ಕಾರಿ ಅಧಿಕಾರಿ, ನೌಕರಿಗೆ ಈ ಸದವಕಾಶ ಲಭಿಸಿದ್ದು, ಇದನ್ನು ನಿಷ್ಪಕ್ಷವಾಗಿ ಮತ್ತು ಪಾರದರ್ಶಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಚುನಾವಣೆಗಳನ್ನು ನಡೆಸುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ. ಸರ್ಕಾರಿ ಅಧಿಕಾರಿ, ನೌಕರಿಗೆ ಈ ಸದವಕಾಶ ಲಭಿಸಿದ್ದು, ಇದನ್ನು ನಿಷ್ಪಕ್ಷವಾಗಿ ಮತ್ತು ಪಾರದರ್ಶಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಇಇಒ, ವಿಎಸ್‍ಟಿ ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯನ್ನು ಎಲ್ಲರೂ ಒಂದು ತಂಡವಾಗಿ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಇಇಒ, ವಿಎಸ್‍ಟಿ ಯಾವುದೇ ತಂಡಗಳು ತಮ್ಮ ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗಬೇಕು. ವಾಹನಗಳು ಸೇರಿದಂತೆ ಕರ್ತವ್ಯದಲ್ಲಿ ಆದಷ್ಟು ಹೆಚ್ಚಾಗಿ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುವುದು. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಒ ಯವರೊಂದಿಗೆ ಖುದ್ದಾಗಿ ಎಲ್ಲ ಚೆಕ್‍ ಪೋಸ್ಟ್‌ಗಳಿಗೆ ಭೇಟಿ ನೀಡುವೆವು. ಚುನಾವಣಾ ಸಮಯದಲ್ಲಿ ಚೆಕ್‍ಪೋಸ್ಟ್‌ಗಳಲ್ಲಿ ಸ್ವಲ್ಪ ಟ್ರಾಫಿಕ್ ಸಮಸ್ಯೆ ಆಗುತ್ತದೆ. ಅದನ್ನು ನಿರ್ವಹಿಸಬೇಕು. ಚೆಕ್‍ಪೋಸ್ಟ್‌ಗಳಲ್ಲಿ ಬಸ್‍ಗಳನ್ನು ಸಹ ತಪಾಸಣೆ ಮಾಡಬೇಕು ಎಂದು ಹೇಳಿದರು.

ತಹಸೀಲ್ದಾರರು ತಮ್ಮ ಚುನಾವಣಾ ಅಧಿಕಾರಿ, ಸಿಬ್ಬಂದಿಯನ್ನು ಮಕ್ಕಳಂತೆ ನೋಡಿಕೊಳ್ಳಬೇಕು. ತಂಡವಾಗಿ ಉತ್ತಮ ಕಾರ್ಯನಿರ್ವಹಿಸಲು ಪ್ರೇರೇಪಿಸಬೇಕು. ಕ್ಷೇತ್ರದಲ್ಲಿ ಅಥವಾ ಯಾವುದೇ ರೀತಿಯಲ್ಲಿ ಅವರಿಗೆ ಸಮಸ್ಯೆಗಳು ಎದುರಾದಲ್ಲಿ ಶೀಘ್ರವಾಗಿ ಮತ್ತು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಸಾಕಷ್ಟು ಸೇವಾ ಅನುಭವವುಳ್ಳವರನ್ನೇ ಎಂಸಿಸಿ ಇತರೆ ತಂಡಗಳಿಗೆ ನೇಮಕ ಮಾಡಲಾಗಿದೆ. ಯಾವುದೇ ಕಾರಣಕ್ಕೂ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ತಮ್ಮ ಜವಾಬ್ದಾರಿಯಿಂದ ಹಿಂಜರಿಯದೇ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕೆಲಸ ನಿರ್ವಹಣೆ ವೇಳೆ ಮೂಲಸೌಕರ್ಯ, ಭದ್ರತೆ ಸೇರಿದಂತೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ ಸಂಬಂಧಿಸಿದ ತಹಸೀಲ್ದಾರ್ ಅಥವಾ ತಮ್ಮ ಗಮನಕ್ಕೆ ತಂದಲ್ಲಿ ಸರಿಪಡಿಸುವುದಾಗಿ ತಿಳಿಸಿದರು.

ತಮ್ಮ ಚುನಾವಣಾ ಪಾತ್ರದ ಕರ್ತವ್ಯಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಗೊಂದಲಗಳು, ಸ್ಪಷ್ಟೀಕರಣಗಳಿದ್ದಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್ ಬಳಿ ಕೇಳಿ ಸ್ಪಷ್ಟಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಾಸ್ಟರ್ ಟ್ರೈನರ್‌ಗಳಾದ ಶಿವಕುಮಾರ್, ರವಿಚಂದ್ರ ನಾಯ್ಕ್ ಹಾಜರಿದ್ದರು.

- - - -6ಎಸ್‌ಎಂಜಿಕೆಪಿ01:

ಶಿವಮೊಗ್ಗದ ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿವಿಟಿ, ಇಇಒ, ವಿಎಸ್‍ಟಿ ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.