ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಿ: ಉಪಲೋಕಾಯುಕ್ತ ಬಿ. ವೀರಪ್ಪ

| Published : Sep 14 2025, 01:04 AM IST

ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಕೆಲಸ ಮಾಡಿ: ಉಪಲೋಕಾಯುಕ್ತ ಬಿ. ವೀರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಸರ್ಕಾರಿ ಕೆಲಸ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಂತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಉಪಲೋಕಾಯುಕ್ತ ಬಿ. ವೀರಪ್ಪ ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ. ಸರ್ಕಾರಿ ಕೆಲಸದಲ್ಲಿ ಇದ್ದವರು ತಪ್ಪು ಕೆಲಸ ಮಾಡಿ ಪಶ್ಚಾತ್ತಾಪ ಪಡುವುದಕ್ಕಿಂತ ಪ್ರಾಮಾಣಿಕವಾಗಿ ಕೆಲಸ ಮಾಡಿ ನೆಮ್ಮದಿ ಜೀವನ ನಡೆಸುವುದು ಮುಖ್ಯ ಎಂದರು.

ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದ್ದರೆ ಅಥವಾ ಕೇಸ್ ದಾಖಲಿಸಿದ್ದರೆ ಲೋಕಾಯುಕ್ತದಲ್ಲಿ ಕೇಸ್ ದಾಖಲಿಸಲು ಸಾಧ್ಯವಿಲ್ಲ. ಸುಳ್ಳು ಕೇಸ್ ಗಳಿಂದ ನಿಜ ಕೇಸ್‌ಗಳು ವಿಳಂಬವಾಗುತ್ತಿವೆ. ಇದರಿಂದ ನಿಷ್ಠಾವಂತ ಅಧಿಕಾರಿಗಳು ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿವೆ. ಸುಳ್ಳು ಕೇಸ್ ಹಾಕಿದವರಿಗೆ ನಿರ್ದಾಕ್ಷಿಣ್ಯವಾಗಿ ಶಿಕ್ಷೆ ನೀಡಲಾಗುತ್ತದೆ. ಸುಳ್ಳು ಕೇಸ್ ಹಾಕಿದವರಿಗೆ ಆರು ತಿಂಗಳು 3 ವರ್ಷ ಅಥವಾ 5 ವರ್ಷದವರೆಗೆ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದರು.

ಮುರುಳಿ ಮೋಹನ್‌ ಎಂಬುವವರು ಬಾಶೆಟ್ಟಿಹಳ್ಳಿ ಸರ್ವೇ ನಂ 34/3 ಒಂದು ಎಕರೆ 3 ಕುಂಟೆ ಜಾಗದಲ್ಲಿ 5 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದು ಪಕ್ಕದಲಿ ಪೆಟ್ರೋಲ್ ಬಂಕ್ ಇದ್ದು ಮತ್ತು ಕಟ್ಟಡವು ರಸ್ತೆಯ ಪಕ್ಕಕ್ಕೆ ನಿರ್ಮಾಣಗೊಳ್ಳುತ್ತಿದೆ ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಕರಣ ದಾಖಲಿಸಿದ್ದಾರೆ. ಹಾಗಾಗಿ ಸಂಬಂಧಪಟ್ಟ ಮಾಲೀಕರು ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದಿದ್ದಾರೇ ಎಂಬುದನ್ನು ಪರಿಶೀಲಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಇದ್ದರೆ ಕಟ್ಟಡ ತೆರವುಗೊಳಿಸುವಂತೆ ಕ್ರಮ ವಹಿಸಿ ಎಂದರು.

ದೊಡ್ಡಬಳ್ಳಾಪುರದ ಕೆಲವು ಕೆರೆಗಳಿಗೆ ಕಸ ತಂದು ಸುರಿಯುತ್ತಿರುವುದು ಮಾಲಿನ್ಯ ಉಂಟಾಗಿ ಸುತ್ತ ಮುತ್ತಲಿನ ಹಳ್ಳಿಗಳಿಗೆ, ಕೆರೆಗೆ, ಪರಿಸರಕ್ಕೆ ಹಾನಿ ಉಂಟಾಗಿದೆ. ಯಾಕೆ ಇದುವರೆಗೆ ಕ್ರಮ ಆಗಿಲ್ಲ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿಕೆ ಬಾಬಾ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

ಫೋಟೋ-13ಕೆಡಿಬಿಪಿ1- ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೊಡ್ಡಬಳ್ಳಾಪುರ ತಾಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.