ಸಾರಾಂಶ
ಬೆಂಗಳೂರು : ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಲು ತೀರ್ಮಾನಿಸಿರುವುದನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದೆ. ಇದೇ ವೇಳೆ, ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿರುವ ಸಂಘ, ಸರ್ಕಾರಿ ನೌಕರರ ಅವಲಂಬಿತ ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಂಘದ ಈ ಬೇಡಿಕೆಗಳ ಬಗ್ಗೆ ಸರ್ಕಾರ ಕೂಡಲೇ ಆದೇಶ ಹೊರಡಿಸಲು ವಿಳಂಬ ಮಾಡಿದೆ. ಸಂಘದ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಜು.23ರಂದು ರಾಜ್ಯದ ಎಲ್ಲ ಇಲಾಖೆಗಳು, ನಿಗಮ,ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆ ಹಾಗೂ ಅನುದಾನಿತ ಸಂಸ್ಥೆಗಳು, ಹಾಗೂ ನಿವೃತ್ತ ನೌಕರರ ಸಂಘ ಸೇರಿದಂತೆ ವೃಂದ ಸಂಘಗಳ ಸಭೆ ಕರೆದು ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಬೇಡಿಕೆಗಳ ಬಗ್ಗೆ ಆದೇಶ ಹೊರಡಿಸದಿದ್ದಲ್ಲಿ ಅನಿವಾರ್ಯವಾಗಿ ಜು.29ರಿಂದ ಅನಿರ್ದಿಷ್ಟಾವಧಿವರೆಗೆ ಕಚೇರಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.