ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಸಚಿವ ಭೋಸರಾಜು

| Published : Aug 18 2025, 12:00 AM IST

ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಸಚಿವ ಭೋಸರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್.ಭೋಸರಾಜು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮರ್ಥ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ಅವರು ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಶುಕ್ರವಾರ ನೆರವೇರಿಸಿದರು.

ಬಳಿಕ‌ ಮಾತನಾಡಿದ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು.

ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದ್ದರಿಂದ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವುದು ವೈದ್ಯರ ಜವಾಬ್ದಾರಿ ಎಂದರು.

ಆರೋಗ್ಯ ಸೇವೆಗಳು ತಲುಪಬೇಕು:

ಕೊಡಗು ವೈದ್ಯಕೀಯ ವಿಜ್ಞಾನ ‌ಸಂಸ್ಥೆಯನ್ನು ಮೇಲ್ದರ್ಜೆಗೇರಿಸುವಲ್ಲಿ ಶಾಸಕದ್ವಯರು ಶ್ರಮಿಸಿದ್ದಾರೆ. ಆ ದಿಸೆಯಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಲ್ಲಾ ವಿಭಾಗಗಳಲ್ಲಿ ಆರೋಗ್ಯ ಸೇವೆಗಳು ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು.

ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳು ಸಕಾಲದಲ್ಲಿ ತಲುಪಿದಾಗ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿದೆ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಎನ್.ಎಸ್.ಭೋಸರಾಜು ಅವರು ವಿವರಿಸಿದರು.

ವೈದ್ಯಕೀಯ ವಿಜ್ಞಾನ ಸಚಿವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ವಿಭಾಗಕ್ಕೆ 1250 ಕೋಟಿ ರೂ ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ಹಲವು ವರ್ಷಗಳಿಂದ ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು, ಅದು ಈಗ ಈಡೇರಿದಂತಾಗಿದೆ ಎಂದು ತಿಳಿಸಿದರು.

ಆರೋಗ್ಯ ಸೌಲಭ್ಯಗಳು ತಲುಪಬೇಕು:

ಜಿಲ್ಲೆಯಲ್ಲಿ ಎಲ್ಲರ ಪ್ರಯತ್ನದಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿದ್ದು, ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪಬೇಕು ಎಂದು ಹೇಳಿದರು.

''''''''''''''''ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ನಮ್ಮ (ಜನ ಪ್ರತಿನಿಧಿಗಳ) ಜವಾಬ್ದಾರಿಯಾಗಿದೆ. ಅದೇ ರೀತಿ ಆಸ್ಪತ್ರೆಗೆ ಬರುವವರಿಗೆ ಸಕಾಲದಲ್ಲಿ ಆರೋಗ್ಯ ಸೇವೆ ಒದಗಿಸುವುದು ನಿಮ್ಮ (ವೈದ್ಯರ) ಕರ್ತವ್ಯ, ಅದನ್ನು ಅರಿತು ಕಾರ್ಯ ನಿರ್ವಹಿಸಬೇಕು ಎಂದು ಎಚ್ಚರಿಸಿದರು.''''''''''''''''

ವೈದ್ಯರು ರೋಗಿಯ ಆರೋಗ್ಯ ಸರಿಯಾಗಿ ಉಪಚರಿಸಬೇಕು. ಇದರಿಂದ ರೋಗಿಯ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಾಣಬಹುದಾಗಿದೆ ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯ ಪಟ್ಟರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂ ಆರ್ ಐ ಸ್ಕ್ಯಾನಿಂಗ್ ವಿಭಾಗ ಸೇರಿದಂತೆ ಹಲವು ವಿಭಾಗಕ್ಕೆ ಮೂಲ‌ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಇಲ್ಲಿನ ಆಸ್ಪತ್ರೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಡಾ.ಮಂತರ್ ಗೌಡ ಅವರು ನುಡಿದರು.

ಕಾರ್ಡಿಯಾಲಜಿ ವಿಭಾಗದಲ್ಲಿಯೂ‌ ಸಹ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು.

ಖಾಯಂ ವೈದ್ಯರ ನೇಮಕಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು ಎಂದು ಡಾ.ಮಂತರ್ ಗೌಡ ಅವರು ಹೇಳಿದರು.

ಮೇಲ್ದರ್ಜೆಗೆರುವ ಕಾಮಗಾರಿ 18 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಗುಣಮಟ್ಟದ ಹಾಗೂ ಇಲ್ಲಿನ ವಾತಾವರಣಕ್ಕೆ ತಕ್ಕಂತೆ ಕಾಮಗಾರಿ ಕೈಗೊಳ್ಳುವಂತೆ ಸಲಹೆ ನೀಡಿದರು.

20 ಕೋಟಿ ರು. ಒದಗಿಸಲು ಪ್ರಯತ್ನ:

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ ಇನ್ನೂ 20 ಕೋಟಿ ರು. ಒದಗಿಸಲು ಪ್ರಯತ್ನಿಸಲಾಗುವುದು. ಹಾಗೆಯೇ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೂ ಕ್ರಮವಹಿಸಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ವಿವರಿಸಿದರು.

ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಎ.ಜೆ.ಲೋಕೇಶ್, ಡಾ.ವಿಶಾಲ್ ಕುಮಾರ್, ಡಾ.ನಂಜುಂಡಯ್ಯ, ಡಾ.ಸತೀಶ್, ಡಾ.ಸೋಮಶೇಖರ್ ಇತರರು ಇದ್ದರು.