ಉದ್ಯೋಗದಾತ ಕೈಗಾರಿಕೆಗಳ ಬೆಂಬಲಕ್ಕೆ ಸರ್ಕಾರ ಸದಾ ಬದ್ಧ : ಡಿಸಿ ಡಾ. ಕೆ ವಿದ್ಯಾಕುಮಾರಿ

| Published : Feb 28 2025, 12:48 AM IST

ಉದ್ಯೋಗದಾತ ಕೈಗಾರಿಕೆಗಳ ಬೆಂಬಲಕ್ಕೆ ಸರ್ಕಾರ ಸದಾ ಬದ್ಧ : ಡಿಸಿ ಡಾ. ಕೆ ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘಗಳ ಸಹಯೋಗದಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿ ಸ್ಥಳಿಯರಿಗೆ ಉದ್ಯೋಗ ನೀಡುವ ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಕೊಡಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಗುರುವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘಗಳ ಸಹಯೋಗದಲ್ಲಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೊಸ ಕೈಗಾರಿಕೆಗಳು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ತ್ಯಾಜ್ಯ ವಸ್ತಗಳು ನದಿ, ಸಮುದ್ರಕ್ಕೆ ಸೇರಿ ಜಲಚರ, ಮನುಷ್ಯ ಜೀವನಕ್ಕೆ ಹಾನಿಯಾಗದಂತೆ ನಿಭಾಯಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಜಮೀನಿನ ಲಭ್ಯತೆ ಕಡಿಮೆ ಇದೆ. ಆದರೂ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಜಿಲ್ಲೆಯ ನಂದಿಕೂರು, ಬೆಳಪು, ಬೈಂದೂರಿನ ಸರ್ಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಕೈಗಾರಿಕೆ ವಲಯ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಸುಮಾರು 12500 ಸಣ್ಣ ಕೈಗಾರಿಕೆಗಳು, 50 ಮಧ್ಯಮ ಕೈಗಾರಿಕೆಗಳು ಹಾಗೂ 7 ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ ಸುಮಾರು 132,000 ಜನ ಉದ್ಯೋಗ ಪಡೆದು ಜೀವನ ಸಾಗಿಸುತ್ತಿದ್ದಾರೆ. ಜಿಲ್ಲೆಯ ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುತ್ತಿದ್ದಾರೆ, ಅವರಿಗೆ ಇಲ್ಲಿಯೇ ಉದ್ಯೋಗಾವಕಾಶ ದೊರೆತಲ್ಲಿ ಕುಟುಂಬದವರೊಂದಿಗೆ ಇಲ್ಲಿಯೇ ನೆಲೆಕಂಡುಕೊಳ್ಳುತ್ತಾರೆ ಎಂದು ಹೇಳಿದರು.

ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಇ-ಖಾತಾವು ಸಣ್ಣ ಕೈಗಾರಿಕೆಗಳಿಗೆ ತೊಂದರೆಯನ್ನುಂಟುಮಾಡಿದೆ. ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ಗಳಿಲ್ಲದೇ ಯಾವುದೇ ನೋಂದಣ, ಮರು ನೋಂದಣಿ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎಂದರು.

ರಫ್ತು ಕುರಿತು ಸತೀಶ್ ಕೋಟ, ಝಡ್.ಇ.ಡಿ ಯೋಜನೆ ಕುರಿತು ರೇಣುಕಾ ಹಾಗೂ ಲೀನ್ ಯೋಜನೆ ಕುರಿತು ಡಾ. ಎಸ್.ಎಂ ಜಗದೀಶ್ ಉಪನ್ಯಾಸ ನೀಡಿದರು.

ಕಾರ್ಯಾಗಾರದಲ್ಲಿ ಐ.ಇ.ಡಿ.ಎಸ್ ಜಂಟಿ ನಿರ್ದೇಶಕ ಡಾ. ಕೆ ಸಾಕ್ರಾಟಿಸ್, ಸಣ್ಣ ಕೈಗಾರಿಕೆಗಳ ಸಂಘದ ಜಿಲ್ಲಾ ಅಧ್ಯಕ್ಷ ಹರೀಶ್ ಕುಂದರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ವಿ.ಟಿ.ಪಿ.ಸಿ ಮಂಗಳೂರು ವಿಭಾಗದ ಉಪನಿರ್ದೇಶಕ ಮಂಜುನಾಥ್ ಹೆಗಡೆ, ಕಾಸಿಯಾ ಉಪಾಧ್ಯಕ್ಷ ಗಣೇಶ್ ರಾವ್ ಬಿ.ಆರ್, ಖಜಾಂಜಿ ಮಂಜುನಾಥ್ ಎಚ್, ಕೈಗಾರಿಕಾ ಉದ್ದಿಮೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕೇಗಾರಿಕಾ ಕೇಂದ್ರದ ಗೌರವ ಪ್ರಧಾನ ಕಾರ್ಯದರ್ಶಿ ಸುರೇಶ್ ಎನ್ ಸಾಗರ್ ನಿರೂಪಿಸಿ, ವಂದಿಸಿದರು.