ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.ಉಡುಪಿ ಜಿಲ್ಲೆ ಸುಮಾರು 167 ಗ್ರಾ.ಪಂ., 15 ಲಕ್ಷ ಜನಸಂಖ್ಯೆ ಹೊಂದಿದ್ದು, ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವಾಗಿ ಮುಂಚೂಣಿಯಲ್ಲಿದೆ. ಈ ಜಿಲ್ಲೆಯ ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ ಎಂದವರು ಮನವಿಯಲ್ಲಿ ವಿವರಿಸಿದ್ದಾರೆ.ಮನವಿಗೆ ಸ್ಪಂದಿಸಿದ ಸಚಿವರು, ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.